ಕೊಪ್ಪಳ: ಹೊಲದ ಮನೆಯಲ್ಲಿ ಕಟ್ಟಿದ್ದ ಜಾನುವಾರುಗಳನ್ನು ನೋಡಿಕೊಂಡು ಬರಲು ಹೋಗಿದ್ದ ವೇಳೆ ಕೊಪ್ಪಳ ತಾಲ್ಲೂಕಿನ ಇಂದರಗಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಮೇಲೆ ಕರಡಿ ದಾಳಿ ಮಾಡಿದೆ.
ಬುಧವಾರ ರಾತ್ರಿ 10.30ರ ಸುಮಾರಿಗೆ ಈ ದಾಳಿ ನಡೆದಿದ್ದು, ಕೊಪ್ಪಳ ತಾಲ್ಲೂಕಿನ ಇಂದರಗಿ ಗ್ರಾಮದ 45 ವರ್ಷದ ಕರಿ ಹನುಮಪ್ಪ ಕುರಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಲೆ ಹಾಗೂ ಕುತ್ತಿಗೆಗೆ ಗಾಯಗಳಾಗಿದ್ದು, ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದರಗಿ ಗ್ರಾಮ ಇರಕಲ್ಲಗಡ ಹೋಬಳಿ ವ್ಯಾಪ್ತಿಯಲ್ಲಿ ಬರುತ್ತದೆ. ಈ ಭಾಗದ ಪ್ರಮುಖ ರಾಜಕೀಯ ನಾಯಕ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯ ಕರಿಯಣ್ಣ ಸಂಗಟಿ ಆಸ್ಪತ್ರೆಗೆ ಭೇಟಿ ನೀಡಿ ಕರಿ ಹನುಮಪ್ಪ ಅವರ ಆರೋಗ್ಯ ವಿಚಾರಿಸಿದರು.
ಬಳಿಕ ಪ್ರಜಾವಾಣಿ ಜೊತೆ ಮಾತನಾಡಿ ’ಹನುಮಪ್ಪ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಒಂದೆರೆಡು ದಿನ ಇಲ್ಲಿಯೇ ಚಿಕಿತ್ಸೆ ಮುಂದುವರಿಯಲಿದೆ. ಆಗಲೂ ಗುಣಮುಖರಾಗದಿದ್ದರೆ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಊರಿಗೆ ಕರೆದುಕೊಂಡು ಹೋಗಲಾಗುವುದು’ ಎಂದು ಹೇಳಿದರು.
ಈಡೇರದ ಬೇಡಿಕೆ: ಇರಕಲ್ಲಗಡ ಹೋಬಳಿ ವ್ಯಾಪ್ತಿಯಲ್ಲಿ ಕರಡಿಗಳ ಹಾವಳಿ ವ್ಯಾಪಕವಾಗಿದ್ದು, ಮೇಲಿಂದ ಮೇಲೆ ದಾಳಿಯ ಪ್ರಕರಣಗಳು ವರದಿಯಾಗುತ್ತಲೇ ಇವೆ. ಆದ್ದರಿಂದ ಕರಡಿ ಧಾಮ ಆರಂಭಿಸಬೇಕು ಎನ್ನುವ ಬೇಡಿಕೆ ಹಲವು ವರ್ಷಗಳಿಂದ ಇದೆ. ಆದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ.
‘ಕರಡಿ ಧಾಮ ಆರಂಭಿಸಬೇಕೆಂಬ ನಮ್ಮ ಭಾಗದ ಜನರ ಬೇಡಿಕೆಗೆ ಮನ್ನಣೆ ಸಿಕ್ಕಿಲ್ಲ. ಈ ಬೇಡಿಕೆ ಈಡೇರಿಸುವಂತೆ ನಮ್ಮ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ಅವರಲ್ಲಿ ಮನವಿ ಮಾಡಿದ್ದೇನೆ. ಅಲ್ಲಿಯೂ ಬೇಡಿಕೆ ಈಡೇರದಿದ್ದರೆ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುವುದು’ ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.