ADVERTISEMENT

‘ಪರಿಹಾರದ ಕಾರ್ಯಕ್ಕೆ ಒತ್ತು ನೀಡಿ’

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2021, 3:56 IST
Last Updated 25 ನವೆಂಬರ್ 2021, 3:56 IST

ಕೊಪ್ಪಳ: ‘ಅಧಿಕಾರಿಗಳು ಮಳೆಹಾನಿಗೆ ಸಂಬಂಧಿಸಿದ ಕೆಲಸಗಳಿಗೆ ಒತ್ತು ನೀಡಬೇಕು’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ವಿ.ಮಹೇಶ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಎಲ್ಲ ತಾಲ್ಲೂಕಿನ ತಹಶೀಲ್ದಾರರು ಬೇರೆ ಕೆಲಸಗಳನ್ನು ಪಕ್ಕಕ್ಕಿಟ್ಟು ಮೊದಲು ಮಳೆ ಹಾನಿಯ ಕುರಿತ ಕೆಲಸಗಳಿಗೆ ಆದ್ಯತೆ ನೀಡಬೇಕು. ಗ್ರಾಮ ಲೆಕ್ಕಿಗರಿಂದ ಜಂಟಿ ಸರ್ವೇ ಮಾಡಿಸಿ ತುರ್ತಾಗಿ ಸರ್ಕಾರಕ್ಕೆ ಮಾಹಿತಿ ನೀಡಬೇಕು. ಸಂಬಂಧಿಸಿದವರಿಗೆ ಆದಷ್ಟು ಬೇಗ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.

ADVERTISEMENT

ಜಿಲ್ಲೆಯಲ್ಲಿ ಮಳೆಯಿಂದ 77 ಶಾಲೆಗಳು ಹಾಗೂ 89 ಅಂಗನವಾಡಿ ಕೇಂದ್ರಗಳು ಸೋರುತ್ತಿರುವ ಕುರಿತು ತಿಳಿದು,‘ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳು ಈಚೆಗೆ ನಿರ್ಮಾಣ ಮಾಡಿದ್ದವಾಗಿದ್ದರೆ ಕಳಪೆ ಕಾಮಗಾರಿ ಎಂದು ಪರಿಗಣಿಸಬೇಕು. ಕಟ್ಟಡ ನಿರ್ಮಾಣ ಮಾಡಿದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಅವರು ಜಿಲ್ಲಾಧಿಕಾರಿಗೆ ಸೂಚಿಸಿದರು.

ರೈತರು ವಿಮೆ ಕಂತು ಪಾವತಿಸಿದ್ದರೆ, ವಿಮೆ ಪಾವತಿ ಪ್ರಕ್ರಿಯೆ ಬೇಗನೆ ಪೂರ್ಣಗೊಳ್ಳಲು ಕ್ರಮ ಕೈಗೊಳ್ಳಬೇಕು. ರೈತರಿಗೆ ಪರಿಹಾರ ನೀಡದ ಇನ್ಯುರೆನ್ಸ್ ಕಂಪನಿಗಳ ವಿರುದ್ಧ ವರದಿ ಸಲ್ಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ರೈತರ ಕುಂದುಕೊರತೆ ಮತ್ತು ಅವರ ಸಮಸ್ಯೆಗಳಿಗೆ ಕೃಷಿ ಇಲಾಖೆಯಲ್ಲಿರುವ ಒಂಬುಡ್ಸಮನ್‌ಗಳು ಕೂಡಲೇ ಪರಿಹಾರ ಒದಗಿಸಬೇಕು. ಈ ಬಗ್ಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಜಂಟಿ ಕೃಷಿ ನಿರ್ದೇಶಕರಿಗೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.