ADVERTISEMENT

ಹಾಲಪ್ಪಗೆ ಸಚಿವ ಸ್ಥಾನ: ವಿಜಯೋತ್ಸವ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2021, 2:50 IST
Last Updated 5 ಆಗಸ್ಟ್ 2021, 2:50 IST
ಯಲಬುರ್ಗಾ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಲಪ್ಪ ಆಚಾರ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು
ಯಲಬುರ್ಗಾ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಲಪ್ಪ ಆಚಾರ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು   

ಪ್ರಜಾವಾಣಿ ವಾರ್ತೆ

ಯಲಬುರ್ಗಾ: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರದಲ್ಲಿ ಕ್ಷೇತ್ರದ ಶಾಸಕ ಹಾಲಪ್ಪ ಆಚಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಪಟ್ಟಣದ ವಿವಿಧ ವೃತ್ತಗಳಲ್ಲಿ ಅಭಿಮಾನಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.

ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಬಳಿ ಸಾಕಷ್ಟು ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದ ಕಾರ್ಯಕರ್ತರು ಜಯಘೋಷ ಕೂಗಿದರು.

ADVERTISEMENT

ಪಕ್ಷದ ಹಿರಿಯ ಮುಖಂಡ ಬಸವಲಿಂಗಪ್ಪ ಭೂತೆ ಮಾತನಾಡಿ, ಅತ್ಯಲ್ಪ ಅವಧಿಯಲ್ಲಿ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿದ ಪಕ್ಷದ ಮುಖಂಡರು ಸಚಿವ ಸ್ಥಾನ ನೀಡಿ ಪ್ರೋತ್ಸಾಹಿಸಿದ್ದಾರೆ. ಪಕ್ಷ ನಿಷ್ಠೆ ಹಾಗೂ ಸಂಘಟನೆಯಲ್ಲಿ ಹಗಲಿರುಳು ಶ್ರಮಿಸುತ್ತಿದ್ದ ಹಾಲಪ್ಪ ಆಚಾರ ಅವರ ವ್ಯಕ್ತಿತ್ವಕ್ಕೆ ದೊರೆತ ಗೌರವ ಎಂದರು.

ಮಾಜಿ ಜಿಪಂ ಸದಸ್ಯ ಸಿ.ಎಚ್. ಪೊಲೀಸ್‍ಪಾಟೀಲ ಮಾತನಾಡಿ, ಹಾಲಪ್ಪ ಅವರಿಗೆ ಸಚಿವ ಸ್ಥಾನ ಕೊಟ್ಟಿರುವುದರಿಂದ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಮುಖ್ಯವಾಗಿ ನೀರಾವರಿ ಯೋಜನೆಗಳು ತ್ವರಿತಗತಿಯಲ್ಲಿ ಕಾರ್ಯಗತಗೊಳ್ಳಲು ಸಾಧ್ಯವಾಗುತ್ತದೆ. ಕ್ಷೇತ್ರದ ಪಾಲಿಗೆ ಇದೊಂದು ಸೌಭಾಗ್ಯ ಎಂದು ಹೇಳಿದರು.

ಪಕ್ಷದ ಮಾಜಿ ಅಧ್ಯಕ್ಷ ಶಿವನಗೌಡ ಬನಪ್ಪಗೌಡ್ರ ಮಾತನಾಡಿ, ಸಹಕಾರ ಕ್ಷೇತ್ರದಲ್ಲಿ ಅಭೂತಪೂರ್ವ ಮಾಡಿದ ಕೆಲಸವೇ ಇವರನ್ನು ಉತ್ತುಂಗಕ್ಕೆ ಒಯ್ದಿದೆ ಎಂದರು.

ಪ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ವಸಂತಕುಮಾರ ಭಾವಿಮನಿ, ವ್ಹಿಎಸ್‍ಎಸ್ ಅಧ್ಯಕ್ಷ ಷಣ್ಮುಖಪ್ಪ ರಾಂಪೂರು, ಪ.ಪಂ ಮಾಜಿ ಸದಸ್ಯ ಸಿದ್ರಾಮೇಶ ಬೇಲೇರಿ, ಸೇರಿದಂತೆ ಮತ್ತಿತರರು ಮಾತನಾಡಿದರು.

ಮಲ್ಲನಗೌಡ ಪೋಲೀಸ್ ಪಾಟೀಲ್, ದೊಡ್ಡಯ್ಯ ಗುರುವಿನ, ಈರಪ್ಪ ಬಣಕಾರ, ಶಂಕ್ರಪ್ಪ ಭಾವಿಮನಿ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.