ಕೊಪ್ಪಳ: ಬಿಜೆಪಿಯಿಂದ ಸತತ ಎರಡು ಬಾರಿ ಸಂಸದರಾಗಿರುವ ಸಂಗಣ್ಣ ಕರಡಿ ಅವರಿಗೆ ಈ ಬಾರಿ ಟಿಕೆಟ್ ಕೈ ತಪ್ಪಿರುವ ಕಾರಣ ಅವರು ಕಾಂಗ್ರೆಸ್ ಪಕ್ಷದತ್ತ ಹೆಜ್ಜೆ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಿಕೆಟ್ ಘೋಷಣೆಯಾದ ದಿನದಿಂದಲೂ ಬಿಜೆಪಿ ಜೊತೆ ಅಂತರ ಕಾಯ್ದುಕೊಂಡಿರುವ ಅವರು, ನಗರದಲ್ಲಿ ಬುಧವಾರ ನಡೆದ ಮೈತ್ರಿ ಪಕ್ಷಗಳ ಜೊತೆಗಿನ ಸಭೆಗೂ ಹಾಜರಾಗಲಿಲ್ಲ.
ವರಿಷ್ಠರ ಜೊತೆ ಚರ್ಚೆಗೆ ಬೆಂಗಳೂರಿಗೆ ತೆರಳಿದ್ದ ಅವರು ಅಲ್ಲಿಯೇ ಉಳಿದುಕೊಂಡಿದ್ದಾರೆ. ಕುಟುಂಬದ ಸ್ನೇಹಿತರೂ ಆಗಿರುವ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಸಂಸದರ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಕಾಂಗ್ರೆಸ್ ಪ್ರಮುಖರೊಬ್ಬರು, ‘ಎರಡು ಮೂರು ದಿನಗಳಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ’ ಎಂದರು.
‘ಜನಾರ್ದನ ರೆಡ್ಡಿ ಕೂಡ ಬಿಜೆಪಿ ಸೇರಿದ್ದರಿಂದ ಫಲಿತಾಂಶದ ಮೇಲೆ ಪರಿಣಾಮ ಬೀರಬಹುದು ಎಂದು ಜಿಲ್ಲೆಯ ಕಾಂಗ್ರೆಸ್ ನಾಯಕರೇ ಸಂಗಣ್ಣ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಕಾಯುತ್ತಿದ್ದಾರೆ’ ಎಂದು ಮೂಲಗಳ ತಿಳಿಸಿವೆ. ಈ ಕುರಿತು ಪ್ರತಿಕ್ರಿಯೆ ಪಡೆಯಲು ಸಂಗಣ್ಣ ಕರಡಿ ಲಭ್ಯರಾಗಲಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.