
ಮುನಿರಾಬಾದ್: ಸಮೀಪದ ಬೂದುಗುಂಪ ಬಳಿಯ ಬೂದೇಶ್ವರ ದೇವಸ್ಥಾನ ಕಲ್ಯಾಣ ಮಂಟಪದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಪ್ಪಳ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಈಚೆಗೆ ನಡೆಯಿತು.
ಗೋಷ್ಠಿಯನ್ನು ಯೋಜನೆಯ ಪ್ರಾದೇಶಿಕ ನಿರ್ದೇಶಕ ಜೆ.ಚಂದ್ರಶೇಖರ ಅವರು ಉದ್ಘಾಟಿಸಿ ಮಾತನಾಡಿ, ‘ಸ್ವಸಹಾಯ ಸಂಘದ ಮೂಲಕ ಮಹಿಳೆಯರು ಸ್ವಾವಲಂಬಿ ಜೀವನ ನಡೆಸುತ್ತಿದ್ದು, ಕುಟುಂಬ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿಗಳನ್ನು ಕಲಿಸುವ ಮೂಲಕ ಅವರನ್ನು ಆದರ್ಶ ವ್ಯಕ್ತಿಗಳನ್ನಾಗಿ ರೂಪಿಸುವ ಶಕ್ತಿಯನ್ನು ದೇವರು ವಿಶೇಷವಾಗಿ ಮಹಿಳೆಯರಿಗೆ ನೀಡಿದ್ದಾನೆ’ ಎಂದರು.
ಸರ್ಕಾರಿ ವಿಶೇಷ ಅಭಿಯೋಜಕಿ ಗೌರಮ್ಮ ದೇಸಾಯಿ ಮಾತನಾಡಿ, ವರದಕ್ಷಿಣೆ ಕಿರುಕುಳ, ಪೋಕ್ಸೊ ಕಾಯ್ದೆ, ಆಸ್ತಿ ವಿಂಗಡಣೆ, ಬಾಲ್ಯ ವಿವಾಹ, ಮಹಿಳೆಯರ ಹಕ್ಕುಗಳು, ಮಹಿಳಾ ದೌರ್ಜನ್ಯ ವಿರುದ್ಧ ಇರುವ ಕಾನೂನು ರಕ್ಷಣೆ ಕುರಿತು ಮಾಹಿತಿ ನೀಡಿದರು.
ರಂಗೋಲಿ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಸನ್ಮಾನ ಮತ್ತು ಬಹುಮಾನ ವಿತರಣೆ ನಡೆಯಿತು.
ಯೋಜನೆಯ ಜಿಲ್ಲಾ ನಿರ್ದೇಶಕ ಪ್ರಕಾಶರಾವ್, ಮಂಜುಳಾ, ಜನಜಾಗೃತಿ ವೇದಿಕೆಯ ಸದಸ್ಯ ಗುರುಸಿದ್ದಯ್ಯ ಮತ್ತು ಬಸಯ್ಯ ವಂಕಲಕುಂಟಿ, ಒಕ್ಕೂಟದ ಅಧ್ಯಕ್ಷ ಅಮರೇಶ ಇದ್ದರು.
25 ಕೇಂದ್ರಗಳ ಸಂಯೋಜಕಿಯರು, ಸ್ವಸಹಾಯ ಸಂಘದ ಸದಸ್ಯರು ಭಾಗವಹಿಸಿದ್ದರು. ಎಸ್.ರಾಜೇಶ್ ಸ್ವಾಗತಿಸಿ, ಲಕ್ಷ್ಮೀದೇವಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.