ಅಳವಂಡಿ: ಮನುಷ್ಯ ಆರೋಗ್ಯವಾಗಿದ್ದರೆ ಮಾತ್ರ ಜೀವನ ಸುಸೂತ್ರವಾಗಿ ನಡೆಯಲು ಸಾಧ್ಯ. ಆದ್ದರಿಂದ ಜೀವನದಲ್ಲಿ ಆಸ್ತಿ ಗಳಿಸುವುದರ ಜೊತೆಗೆ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೂವಿನ ಹಡಗಲಿಯ ಹಿರಿಶಾಂತವೀರ ಸ್ವಾಮೀಜಿ ಹೇಳಿದರು.
ಸಮೀಪದ ಘಟ್ಟಿರಡ್ಡಿಹಾಳ ಗ್ರಾಮದಲ್ಲಿ ಶ್ರಾವಣ ಮಾಸದ ಅಂಗವಾಗಿ ನಡೆಯುತ್ತಿರುವ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮನ ಪುರಾಣ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ನಮ್ಮ ದೊಡ್ಡ ಆಸ್ತಿ ಎಂದರೆ ದೈಹಿಕ ಹಾಗೂ ಮಾನಸಿಕ ಆರೋಗ್ಯ. ಜೊತೆಗೆ ತೃಪ್ತಿ ಹಾಗೂ ಸಮಾಧಾನಕರ ಜೀವನ. ಇವುಗಳು ಸಿಗಬೇಕಾದರೆ ಧರ್ಮ ಜಾಗೃತಿ ಕಾರ್ಯಕ್ರಮ, ಪುರಾಣ, ಪ್ರವಚನ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು. ವರ್ಷವಿಡಿ ದುಡಿದು ದಣಿದ ದೇಹಗಳಿಗೆ ಪುರಾಣಗಳು ಮಾನಸಿಕವಾಗಿ ಚಟುವಟಿಕೆಯಿಂದ ಇರಲು ಸಹಕಾರಿಯಾಗುತ್ತವೆ’ ಎಂದರು.
ಗದುಗಿನ ಬಸವಾರಾಧ್ಯ ಶಾಸ್ತ್ರಿ ಹಿರೇಮಠ ಅವರಿಂದ ಪ್ರವಚನ, ಗದುಗಿನ ಮೃತ್ಯುಂಜಯ ಗವಾಯಿಗಳಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಹೇಮಂತ ಹಿರೇಮಠ ತಬಲಾ ಸಾಥ್ ನೀಡಿದರು. ಶಂಭುಲಿಂಗಯ್ಯ ಹಿರೇಮಠ ಹಾಗೂ ಪ್ರಮುಖರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.