ADVERTISEMENT

ಹೊಸ ಶಿಕ್ಷಣ ನೀತಿಯಿಂದ ಬದಲಾವಣೆ

ರಾಷ್ಟ್ರೀಯ ಹೊಸ ಶಿಕ್ಷಣ ನೀತಿಯ ಕರಡು ಸಮಿತಿ ಸದಸ್ಯ ಪ್ರೊ.ತೇಜಸ್ವಿ ಕಟ್ಟಿಮನಿ ಅಭಿಮತ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2020, 4:49 IST
Last Updated 11 ಅಕ್ಟೋಬರ್ 2020, 4:49 IST
ಕೊಪ್ಪಳ ಜಿಲ್ಲಾ ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ (ಕುಸ್ಮಾ) ಹಮ್ಮಿಕೊಂಡಿದ್ದ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಹಾಗೂ ಉಪನ್ಯಾಸ ಕಾರ್ಯಕ್ರಮವನ್ನು ಸಂಸದ ಸಂಗಣ್ಣ ಕರಡಿ ಉದ್ಘಾಟಿಸಿದರು. ಶಾಸಕ ಕೆ.ರಾಘವೇಂದ್ರ ಹಿಟ್ನಾಳ, ಸಿ.ವಿ.ಚಂದ್ರಶೇಖರ್ ಇದ್ದಾರೆ
ಕೊಪ್ಪಳ ಜಿಲ್ಲಾ ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ (ಕುಸ್ಮಾ) ಹಮ್ಮಿಕೊಂಡಿದ್ದ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಹಾಗೂ ಉಪನ್ಯಾಸ ಕಾರ್ಯಕ್ರಮವನ್ನು ಸಂಸದ ಸಂಗಣ್ಣ ಕರಡಿ ಉದ್ಘಾಟಿಸಿದರು. ಶಾಸಕ ಕೆ.ರಾಘವೇಂದ್ರ ಹಿಟ್ನಾಳ, ಸಿ.ವಿ.ಚಂದ್ರಶೇಖರ್ ಇದ್ದಾರೆ   

ಕೊಪ್ಪಳ: ‘ಶಿಕ್ಷಣ ನಿಂತ ನೀರಾಗಬಾರದು. ಅದು ಕಾಲಕಾಲಕ್ಕೆ ಬದಲಾವಣೆ ಹೊಂದುತ್ತಾ ಸಾಗಬೇಕು. ಕೇಂದ್ರ ಸರ್ಕಾರ ಅನುಷ್ಠಾನಗೊಳಿಸುತ್ತಿರುವ ಹೊಸ ಶಿಕ್ಷಣ ನೀತಿಯಿಂದ ಅಮೂಲಾಗ್ರ ಬದಲಾವಣೆ ಆಗಲಿದೆ’ ಎಂದು ತಿರುಪತಿ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ಹಾಗೂರಾಷ್ಟ್ರೀಯ ಹೊಸ ಶಿಕ್ಷಣ ನೀತಿ ಕರಡು ಸಮಿತಿ ಸದಸ್ಯ ಪ್ರೊ.ತೇಜಸ್ವಿ ಕಟ್ಟಿಮನಿ ಅಭಿಪ್ರಾಯಪಟ್ಟರು.

ಅವರು ಭಾಗ್ಯನಗರದ ಪಾನಗಂಟಿ ಕಲ್ಯಾಣ ಮಂಟಪದಲ್ಲಿ ಶನಿವಾರ ಹಮ್ಮಿಕೊಂಡಿದ್ದಜಿಲ್ಲಾ ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ (ಕುಸ್ಮಾ) ವಾರ್ಷಿಕೋತ್ಸವ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.

‘ಬ್ರಿಟಿಷ್‌ ಶಿಕ್ಷಣ ವ್ಯವಸ್ಥೆ ಹೊಟ್ಟೆ ಹೊರೆಯಲು ಸಹಾಯಕವಾಗಿತ್ತು. ಅದೇ ಶಿಕ್ಷಣ ವ್ಯವಸ್ಥೆಯನ್ನು ನಾವು ಮುಂದುವರೆಸಿಕೊಂಡು ಬಂದಿದ್ದೇವೆ.ಪ್ರಾಥಮಿಕ ಶಿಕ್ಷಣ ಪೂರ್ಣಗೊಳಿಸದ ಹಲವು ಸಾಧಕರು ನಮ್ಮ ಮುಂದೆ ಇದ್ದಾರೆ. ಅವರು ಯಾವುದೇ ವಿಶ್ವವಿದ್ಯಾಲಯಕ್ಕೆ ಹೋಗದೇ ತಮ್ಮ ಕ್ಷೇತ್ರಗಳಲ್ಲಿ ಇದ್ದು ಸಾಧನೆ ಮಾಡಿದರು. ಅಂತವರು ನಮಗೆ ಆದರ್ಶವಾಗಬೇಕು’ ಎಂದು ಸಲಹೆ ನೀಡಿದರು.

ADVERTISEMENT

‘ನಮ್ಮ ಪಕ್ಕದಲ್ಲಿಯೇ ಇರುವ ವಿಜಯ ಸಂಕೇಶ್ವರ, ಕಿರ್ಲೋಸ್ಕರ್‌, ಬೂಮರಡ್ಡಿ ಅವರು ಪದವೀಧರರಲ್ಲದಿದ್ದರೂ ಸಾಮಾಜಿಕ, ಶಿಕ್ಷಣ, ಸಂಸ್ಕಾರ, ಆತ್ಮವಿಶ್ವಾಸದಿಂದ ಬಹು ದೊಡ್ಡ ಉದ್ಯಮಗಳನ್ನು ಕಟ್ಟಿ ನೂರಾರು ಜನರಿಗೆ ಉದ್ಯೋಗ ನೀಡಿದರು. ಇಂತಹ ಸ್ವಾವಲಂಬಿ ಜೀವನ ರೂಪಿಸುವ ಶಿಕ್ಷಣ ವ್ಯವಸ್ಥೆ ಬರಬೇಕು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿದೆ’ ಎಂದು ಹೇಳಿದರು.

‘ವಿಶೇಷ ಕೌಶಲ ನೀಡುವಹೊಸವ್ಯವಸ್ಥೆಗಳು ಶಿಕ್ಷಣ ನೀತಿಯಲ್ಲಿ ಇರಲಿವೆ. ಇದು ನಿಜಕ್ಕೂ ಸಾಕಷ್ಟು ಬದಲಾವಣೆ ತರಲಿದೆ’ ಎಂದರು.

ಸಂಸದ ಸಂಗಣ್ಣ ಕರಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸ್ವಾವಲಂಬಿ, ಆತ್ಮವಿಶ್ವಾಸ, ಸಶಕ್ತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿವೆ. ಸಾವಿರಾರು ಕೋಟಿ ಅನುದಾನವನ್ನು ನೀಡಲಾಗುತ್ತಿದೆ. ಅವುಗಳನ್ನು ನಾವು ಸದ್ಬಳಕೆ ಮಾಡಿಕೊಳ್ಳಬೇಕು. ಶಿಕ್ಷಣ ಕ್ಷೇತ್ರ ಸುಧಾರಣೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರವಾಗಿದೆ. ಅವರ ಸೇವೆಯನ್ನು ಸರ್ಕಾರ ಪರಿಗಣಿಸುತ್ತದೆ’ ಎಂದು ಹೇಳಿದರು.

ಶಾಸಕ ಕೆ.ರಾಘವೇಂದ್ರ ಹಿಟ್ನಾಳನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ ಮಾತನಾಡಿ, ‘ಇಂದು ಖಾಸಗಿ ಶಿಕ್ದಷಣ ಸಂಸ್ಥೆಗಳು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿವೆ. ಸರ್ಕಾರ ಅವುಗಳಿಗೆ ಸಹಾಯ ಮಾಡಬೇಕು’ ಎಂದರು.

ಕುಸ್ಮಾ ಜಿಲ್ಲಾ ಘಟಕದ ಅಧ್ಯಕ್ಷ ಜಗನ್ನಾಥ ಅಲಂಪಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಸಿ.ವಿ.ಚಂದ್ರಶೇಖರ್, ಹಿರಿಯ ವಕೀಲ ರಾಘವೇಂದ್ರ ಪಾನಗಂಟಿ, ಅಲೀಮುದ್ದೀನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.