ADVERTISEMENT

ಮದುವೆಗೂ ಕೊರೊನಾ ‘ಬಂಧನ’

50 ಜನ ಭಾಗವಹಿಸಲು ಮಾತ್ರ ಅವಕಾಶ: ಕಲ್ಯಾಣ ಮಂಟಪಗಳಿಗೆ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2021, 13:52 IST
Last Updated 23 ಏಪ್ರಿಲ್ 2021, 13:52 IST

ಕೊಪ್ಪಳ: ‘ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಸರ್ಕಾರದ ಆದೇಶದ ಕಾರಣ ಜಿಲ್ಲೆಯಲ್ಲಿ ನಡೆಯುವ ಮದುವೆಗಳಿಗೆ ಅನುಮತಿ ಕಡ್ಡಾಯಗೊಳಿಸಲಾಗಿದೆ. 50 ಜನ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ’ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.

‘ಜಿಲ್ಲೆಯಲ್ಲಿ ಮದುವೆಗೆ ಅನುಮತಿ ಕೋರಿ ಅರ್ಜಿಗಳು ಸಲ್ಲಿಕೆಯಾಗಿವೆ. ತಹಶೀಲ್ದಾರರು ತಮ್ಮ ತಾಲ್ಲೂಕಿನಲ್ಲಿ ನಡೆಯುವ ಮದುವೆಗಳಿಗೆ ತಮ್ಮ ಹಂತದಲ್ಲಿಯೇ ಷರತ್ತುಬದ್ಧ ಅನುಮತಿ ನೀಡಬೇಕು. ಅರ್ಜಿದಾರರಿಂದ ನಿಗದಿತ ಘೋಷಣಾ ಪ್ರಮಾಣ ಪತ್ರ ಪಡೆಯಬೇಕು. ಕೇವಲ 50 ಜನ ಮಾತ್ರ ಭಾಗವಹಿಸಲು ಅನುಮತಿ ನೀಡಬೇಕು’ ಎಂದು ಸೂಚಿಸಿದ್ದಾರೆ.

ಮದುವೆ ಆಯೋಜಿಸಿದವರು ಮದುವೆಯಲ್ಲಿಪರಸ್ಪರ ಅಂತರ ಕಾಪಾಡಿಕೊಂಡು, ಭಾಗವಹಿಸುವ ಜನರಿಗೆ ಕಡ್ಡಾಯವಾಗಿ ಸ್ಯಾನಿಟೈಸರ್ ಮತ್ತು ಮಾಸ್ಕ್ ವ್ಯವಸ್ಥೆ ಕಲ್ಪಿಸಬೇಕು. ತಹಶೀಲ್ದಾರರು ಮದುವೆಗೆ ಅನುಮತಿ ನೀಡಿದ ಮಾಹಿತಿಯನ್ನು ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳಿಗೆ ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನೀಡಬೇಕು ಎಂದು ಹೇಳಿದ್ದಾರೆ.

ADVERTISEMENT

ಗರಿಷ್ಠ 50 ಕ್ಕಿಂತ ಹೆಚ್ಚಿನ ಜನ ಭಾಗವಹಿಸಿದಲ್ಲಿ ಸಂಬಂಧಿಸಿದ ಕಲ್ಯಾಣ ಮಂಟಪ ಅಥವಾ ಮದುವೆ ಹಾಲ್ ಮಾಲೀಕರಿಗೆ ಹಾಗೂ ಮದುವೆ ಆಯೋಜಕರಿಗೆ ಕೋವಿಡ್ ನಿಯಮಾನುಸಾರ ದಂಡ ವಿಧಿಸಬೇಕು. ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಕರಣ ದಾಖಲಿಸಲು ಸೂಚಿಸಬೇಕು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.