ಕೊಪ್ಪಳ: ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರಪಟ್ಟಿ ಫಲಕ ಹಾಕದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಶಿವಾನಂದ ಪಾಟೀಲ ಎಚ್ಚರಿಕೆ ನೀಡಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ನಡೆದ ಗದಗ ಮತ್ತು ಕೊಪ್ಪಳ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಕರ್ನಾಟಕವೈದ್ಯಕೀಯ ಕಾಯ್ದೆ-2017 ಪ್ರಕಾರ ಎಲ್ಲ ಖಾಸಗಿ ಆಸ್ಪತ್ರೆಗಳು ತಾವು ನೀಡುವ ಚಿಕಿತ್ಸೆಯ ದರಪಟ್ಟಿಯನ್ನು ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಪ್ರದರ್ಶನ ಮಾಡಬೇಕು ಎಂಬ ನಿಯಮ ಇದೆ. ಆದರೆ, ಬಹುತೇಕ ಕಡೆ ಅನುಷ್ಠಾನವಾಗುತ್ತಿಲ್ಲ. ಈ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿ ದರಪಟ್ಟಿ ಅಳವಡಿಸುವಂತೆ ತಾಕೀತು ಮಾಡಬೇಕು ಎಂದು ಸಚಿವರು ಸೂಚಿಸಿದರು.
‘ಈಚೆಗೆ ದರಪಟ್ಟಿ ಹಾಕದ ಆಸ್ಪತ್ರೆಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದ್ದೇನೆ. ದರಪಟ್ಟಿ ಹಾಕದೇ ಇರುವುದು ಕಾಯ್ದೆಯ ಉಲ್ಲಂಘನೆಯಾಗುತ್ತದೆ. ಈ ಕುರಿತು ಸಮಿತಿ ರಚನೆ ಮಾಡಿ ವರದಿ ಪಡೆಯಲಾಗುವುದು‘ ಎಂದರು
’ಆಸ್ಪತ್ರೆಗಳ ಆಡಳಿತ ವಿಭಾಗಕ್ಕೆ ವೈದ್ಯರನ್ನು ನೇಮಕ ಮಾಡುವುದಕ್ಕೆ ನನ್ನ ವಿರೋಧವಿದೆ. ಇದರ ಬದಲು ಆಡಳಿತದ ಅನುಭವ ಇರುವವರನ್ನು ನೇಮಕ ಮಾಡಿದರೆ. ವೈದ್ಯರ ಕಾರ್ಯ ಭಾರವೂ ಕಡಿಮೆಯಾಗುತ್ತದೆ. ಅವರ ವೃತ್ತಿ ಕೌಶಲ ಹೆಚ್ಚಲು ಸಾಧ್ಯ. ಈ ನಿಟ್ಟಿನಲ್ಲಿ ಇಲಾಖೆಯವ್ಯವಸ್ಥೆ ಬದಲಿಸಲು ಚಿಂತನೆ ನಡೆದಿದೆ’ ಎಂದು ಹೇಳಿದರು.
ಜಿಲ್ಲಾ ಆಸ್ಪತ್ರೆಗಳಿಗೆ ತಜ್ಞ ವೈದ್ಯರ ನೇಮಕ, ಆಂಬುಲೆನ್ಸ್, ಔಷಧಿ ಸೇರಿದಂತೆ ಇತರ ಅಗತ್ಯ ಸೌಲಭ್ಯ ಕಲ್ಪಿಸುವ ಚಿಂತನೆ ನಡೆದಿದೆ. ವೈದ್ಯಕೀಯ ಸ್ನಾತಕೋತ್ತರ ಪದವಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಆರೋಗ್ಯ ಸೇವೆಗೆ ಬಳಸಿಕೊಳ್ಳುವ ಯೋಚನೆಯೂ ಇದೆ. ಇದಕ್ಕೆ ವೈದ್ಯರ ಸಂಘವಿರೋಧ ವ್ಯಕ್ತಪಡಿಸಬಾರದು ಎಂದು ಮನವಿ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.