ಕೊಪ್ಪಳ: ‘ತೀವ್ರ ಮಳೆಯಿಂದಾಗಿ ಹಾನಿ ಅನುಭವಿಸಿದ ಜಿಲ್ಲೆಯ ಜನರಿಗೆ ತ್ವರಿತವಾಗಿ ಪರಿಹಾರ ಒದಗಿಸಬೇಕು. ಬೆಳೆ ಹಾನಿ ಗುರುತಿಗೆ ಜಂಟಿ ಸಮೀಕ್ಷೆ ನಡೆಸಬೇಕು’ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿದ ಮಳೆಯಿಂದ ಆದ ಹಾನಿ ಕುರಿತು ಚರ್ಚಿಸಲು ಶುಕ್ರವಾರ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ವಿಡಿಯೊ ಸಂವಾದ ನಡೆಸಿದ ಅವರು ‘ಸಮೀಕ್ಷೆ ನಡೆಸಿ ಫಲಾನುಭವಿಗಳಿಗೆ ಕೂಡಲೇ ಪರಿಹಾರ ಒದಗಿಸಬೇಕು. ಕೆಳಮಟ್ಟದಲ್ಲಿರುವ ಸೇತುವೆ ಮತ್ತು ರಸ್ತೆಗಳ ಮೇಲೆ ನೀರು ಬಂದರೆ, ಅಂತಹ ಸ್ಥಳಗಳಲ್ಲಿ ಸಾರ್ವಜನಿಕರು ಹೋಗದಂತೆ ಮುನ್ನಚ್ಚರಿಕೆ ವಹಿಸಿ ಸಾರ್ವಜನಿಕರಿಗೆ ತಿಳಿವಳಿಕೆ ನೀಡಲು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಎಚ್ಚರಿಕೆ ವಹಿಸಬೇಕು’ ಎಂದರು.
‘ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ಚರಂಡಿ, ರಾಜ ಕಾಲುವೆಗಳಲ್ಲಿನ ಹೂಳು ಮತ್ತು ಕಸ ತೆಗೆಯಲು ಸ್ಥಳೀಯ ಸಂಸ್ಥೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮಳೆಯಿಂದ ನೀರು ನಿಂತು ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೇಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು’ ಎಂದು ಸೂಚಿಸಿದರು.
ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ ‘ಅಕ್ಟೋಬರ್ 1ರಿಂದ 6ರ ವರೆಗೆ ವಾಡಿಕೆ ಮಳೆ 3.73 ಸೆಂ.ಮೀ. ಇದ್ದು 3.84 ಸೆಂ. ಮೀ. ಮಳೆಯಾಗಿದೆ. ಕಳೆದ ಹತ್ತು ದಿನಗಳಿಂದ ಸುರಿದ ಮಳೆಯಿಂದ ಜಿಲ್ಲೆಯಲ್ಲಿ ಸುಮಾರು 400 ಮನೆಗಳು ಹಾನಿಯಾಗಿವೆ. ಹಾನಿಯಾದ ಮನೆಗಳಿಗೆ ಪರಿಹಾರ ನೀಡುವ ಕಾರ್ಯ ಪ್ರಗತಿಯಲ್ಲಿದೆ’ ಎಂದು ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.