ಶಿವರಾಜ ತಂಗಡಗಿ
ಕೊಪ್ಪಳ: ಜಿಲ್ಲಾಕೇಂದ್ರದ ಸಮೀಪದಲ್ಲಿಯೇ ಬಲ್ಡೋಟಾ ಸ್ಟೀಲ್ ಮತ್ತು ಪವರ್ ಲಿಮಿಟೆಡ್ (ಬಿಎಸ್ಪಿಎಲ್) ಕಂಪನಿ ಉಕ್ಕಿನ ಕಾರ್ಖಾನೆ ಸ್ಥಾಪನೆ ಮಾಡಲು ಮುಂದಾಗುತ್ತಿದ್ದು, ಈ ವಿಚಾರದಲ್ಲಿ ಜನರ ಧ್ವನಿಗೆ ನಮ್ಮ ಸರ್ಕಾರ ಬೆಲೆ ನೀಡಲಿದೆ. ಜನರ ಪರವೇ ನಾವು ನಿಲ್ಲುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ಭಾನುವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಕಾರ್ಖಾನೆ ಸ್ಥಾಪನೆಗೆ ಆಗುತ್ತಿರುವ ವಿರೋಧವನ್ನು ಗಮನಿಸುತ್ತಿದ್ದೇವೆ. ಕಾರ್ಖಾನೆ ಸ್ಥಾಪನೆಗಿಂತ ರೈತರ ಹಾಗೂ ಜನರ ಆರೋಗ್ಯ ರಕ್ಷಣೆ ಮುಖ್ಯ. ಕೊಪ್ಪಳ ಶಾಸಕ ರಾಘವೇಂದ್ರ, ಪಕ್ಷದ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ, ಹಿರಿಯರಾದ ಬಸವರಾಜ ರಾಯರಡ್ಡಿ ಎಲ್ಲರೂ ಸೇರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಮಾತನಾಡುತ್ತೇವೆ’ ಎಂದು ತಿಳಿಸಿದರು.
‘ಕಾರ್ಖಾನೆ ವಿಚಾರದಲ್ಲಿ ನಮ್ಮ ಸರ್ಕಾರದ ದ್ವಂದ್ವ ನಿಲುವಿನ ಪ್ರಶ್ನೆಯೇ ಇಲ್ಲ. ಕೆಲವರು ಕಾರ್ಖಾನೆ ಬೇಕು ಎಂದು ಹೇಳಿರುವ ವಿಚಾರ ನನ್ನ ಗಮನಕ್ಕೆ ಇಲ್ಲ. ಇದರಲ್ಲಿ ನಮ್ಮ ಸರ್ಕಾರ ಮೊಸಳೆ ಕಣ್ಣೀರು ಸುರಿಸುತ್ತಿದೆ ಎನ್ನುವುದರಲ್ಲಿ ಹುರುಳಿಲ್ಲ. ಪಕ್ಷಾತೀತವಾಗಿ ನಡೆಯುತ್ತಿರುವ ಹೋರಾಟದ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ತರುವೆ’ ಎಂದು ಹೇಳಿದರು.
‘ಗವಿಮಠದ ಜಾತ್ರೆಯ ಪೂರ್ವದಲ್ಲಿಯೇ ಗವಿಸಿದ್ಧೇಶ್ವರ ಸ್ವಾಮೀಜಿ ಜೊತೆ ಈ ಕುರಿತು ಚರ್ಚಿಸಿದ್ದೇನೆ. ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಕಾರ್ಖಾನೆಗಳಿಂದ ದೂಳು ಬರುತ್ತಿದ್ದರೆ ನೋಟಿಸ್ ನೀಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.