ADVERTISEMENT

‘ವಿದ್ಯುತ್‌ ಸಂಪರ್ಕ ಕಲ್ಪಿಸಿ’

ಕುಷ್ಟಗಿ: ವಿವಿಧ ಸಂಘಟನೆಗಳ ಕಾರ್ಯಕರ್ತರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2020, 3:05 IST
Last Updated 24 ನವೆಂಬರ್ 2020, 3:05 IST
ಕುಷ್ಟಗಿಯಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಕುಷ್ಟಗಿಯಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ಕುಷ್ಟಗಿ: ಗಂಗಾ ಕಲ್ಯಾಣ ಯೋಜನೆಯಲ್ಲಿ ಕೊರೆದಿರುವ ಕೊಳವೆಬಾವಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸದೆ ಜೆಸ್ಕಾಂ ಅಧಿಕಾರಿಗಳು ಫಲಾನುಭವಿಗಳನ್ನು ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ತಹಶೀಲ್ದಾರ್ ಕಚೇರಿ ಬಳಿ ಸೋಮವಾರ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕೊಳವೆಬಾವಿ ಕೊರೆಯುವ ಏಜೆನ್ಸಿಗಳು ಬಿಲ್‌ ಪಾವತಿಯಾದ ನಂತರ ಜೆಸ್ಕಾಂನಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕಾಗುತ್ತದೆ. ವಿದ್ಯುತ್‌ ಸಂಪರ್ಕ ಕಲ್ಪಿಸಿದ ನಂತರವಷ್ಟೆ ಮೋಟರ್‌ ಸಲಕರಣೆಗಳನ್ನು ನಿಯಮಗಳ ಅನುಸಾರ ಸರ್ಕಾರ ಫಲಾನುಭವಿಗಳಿಗೆ ವಿತರಿಸಲು ಕ್ರಮ ಕೈಗೊಳ್ಳುತ್ತದೆ. ಆದರೆ ಜೆಸ್ಕಾಂ ಅಧಿಕಾರಿಗಳು ಇಲ್ಲದ ನಿಯಮಗಳನ್ನು ವಿವರಿಸುವ ಮೂಲಕ ವಿದ್ಯುತ್‌ ಸಂಪರ್ಕ ಕಲ್ಪಿಸದ ಕಾರಣ ಫಲಾನುಭವಿಗಳು ತೊಂದರೆ ಅನುಭವಿಸುವಂತಾಗಿದೆ. ಇನ್ನೊಂದೆಡೆ ಕೆಲ ರೈತರ ಹೆಸರಿನಲ್ಲಿ ಆರ್‌ಆರ್‌ ಸಂಖ್ಯೆ ನೀಡಿದ್ದರೂ ವಾಸ್ತವದಲ್ಲಿ ಅಲ್ಲಿ ವಿದ್ಯುತ್‌ ಸಂಪರ್ಕವೇ ಇಲ್ಲ ಎಂದು ಆರೋಪಿಸಿದರು.

ಅದೇ ರೀತಿ ಪರಿಶಿಷ್ಟರು, ಬಡವರು ಮತ್ತು ಯುವಕರಿಗೆ ಆರ್ಥಿಕ ಸ್ವಾವಲಂಬನೆ ಸಾಧಿಸಿಕೊಳ್ಳುವ ಸಲುವಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರೂ ಬ್ಯಾಂಕ್‌ಗಳು ಸಾಲ ಸೌಲಭ್ಯ ಕಲ್ಪಿಸದೆ ಅಸಹಕಾರ ನೀತಿ ಅನುಸರಿಸುತ್ತಿವೆ. ಈ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಪ್ರತಿಭಟನೆ ತೀವ್ರಗೊಳಿಸಲಾಗುತ್ತದೆ ಎಂದು ಬರೆದ ಮನವಿಯನ್ನು ತಹಶೀಲ್ದಾರ್ ಎಂ.ಸಿದ್ದೇಶ್‌ ಅವರಿಗೆ ಸಲ್ಲಿಸಿದರು.

ADVERTISEMENT

ಚಂದಾಲಿಂಗಪ್ಪ ಕಲಾಲಬಂಡಿ, ಆರ್‌.ಕೆ.ದೇಸಾಯಿ, ವಸಂತ, ನಜೀರಸಾಬ ಮೂಲಿಮನಿ, ಹಾಗೂ ಫಲಾನುಭವಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.