ಕುಷ್ಟಗಿ (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ದೋಟಿಹಾಳದಲ್ಲಿಅಧಿಕಾರಿಗಳ ಸೂಚನೆ ಕಡೆಗಣಿಸಿ ಪಲ್ಲಕ್ಕಿ ಉತ್ಸವಕ್ಕೆ ಮುಂದಾದ ಭಕ್ತರನ್ನು ತಡೆಯಲು ಯತ್ನಿಸಿದ್ದಕ್ಕೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದ್ದು ಅಲ್ಲದೇ ಜೀಪ್ ಜಖಂಗೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ 50 ಜನರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಅವಧೂತ ಶುಕಮುನಿ ಆರಾಧನೆ ಪ್ರಯುಕ್ತ ಪಲ್ಲಕ್ಕಿ ಉತ್ಸವ ಏರ್ಪಡಿಸಲಾಗಿತ್ತು. ಕರ್ತವ್ಯಕ್ಕೆ ಅಡ್ಡಿಪಡಿಸಿದ, ಅವಾಚ್ಯ ಪದಗಳಿಂದ ನಿಂದಿಸಿದ ಮತ್ತು ಜೀವ ಬೆದರಿಕೆ ಒಡ್ಡಿದ ಆರೋಪದ ಮೇಲೆ ಕಂದಾಯ ಅಧಿಕಾರಿಗಳು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಗ್ರಾಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಸಂಗೀತಾ, ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ ಮತ್ತು ಅಧಿಕಾರಿಗಳು ಭೇಟಿ ನೀಡಿದರು.
‘ಕೋವಿಡ್ ಕಾರಣಕ್ಕೆ ಆರಾಧನಾ ಮಹೋತ್ಸವದ ಸಾರ್ವಜನಿಕ ಆಚರಣೆಗೆ ತಾಲ್ಲೂಕು ಆಡಳಿತ ಅನುಮತಿ ನೀಡಿರಲಿಲ್ಲ. ದೇವಸ್ಥಾನದ ಒಳಗೆ ಸರಳ ಆಚರಣೆಗೆ ತಿಳಿಸಲಾಗಿತ್ತು. ಪೂಜೆ ನಂತರ ನಿಷೇಧದ ನಡುವೆಯು ಭಕ್ತರು ದೇವಾಲಯದಿಂದ ಹೊರಬಂದು ದೋಟಿಹಾಳ-ಕೇಸೂರು ಗ್ರಾಮಗಳಲ್ಲಿ ಪಲ್ಲಕ್ಕಿ ಹೊತ್ತುಕೊಂಡು ಹೋಗಿದ್ದಾರೆ’ ಎಂದು ತಹಶೀಲ್ದಾರ್ ಎಂ.ಸಿದ್ದೇಶ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.