ADVERTISEMENT

‘ಪ್ರಚೋದನಕಾರಿ ಹೇಳಿಕೆ ಮೂಲಕ ಶಾಂತಿ ಕದಡುವ ಯತ್ನ’

ಮಾಜಿ ಶಾಸಕ ಅನ್ಸಾರಿ ಬಂಧನಕ್ಕೆ ಪರಣ್ಣ ಒತ್ತಾಯ

​ಪ್ರಜಾವಾಣಿ ವಾರ್ತೆ
Published 24 ಜೂನ್ 2018, 14:41 IST
Last Updated 24 ಜೂನ್ 2018, 14:41 IST
 ಪರಣ್ಣ ಮುನವಳ್ಳಿ
 ಪರಣ್ಣ ಮುನವಳ್ಳಿ   

ಗಂಗಾವತಿ:‘ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡುವ ನಿಟ್ಟಿನಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಅವರನ್ನು ತಕ್ಷಣ ಪೊಲೀಸರು ಬಂಧಿಸಬೇಕು. ಈ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿ ಮತ್ತು ಸರ್ಕಾರಕ್ಕೆ ಒತ್ತಾಯಿಸಲಾಗುವುದು’ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಳ್ಳು ಆರೋಪ ಮಾಡಿ ಚುನಾಯಿತ ಪ್ರತಿನಿಧಿಗಳು ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳ ಮೇಲೆ ಒತ್ತಡ ತರುತ್ತಿದ್ದಾರೆ. ಅಲ್ಲದೇ ಜಿಲ್ಲಾ ಎಸ್ಪಿ ಅನೂಪ್ ಶೆಟ್ಟಿ ಅವರ ವಿರುದ್ಧ ಅನ್ಸಾರಿ ಸಲ್ಲದ ಆರೋಪ ಮಾಡುವ ಮೂಲಕ ಸಾರ್ವಜನಿಕವಾಗಿ ತೇಜೋವಧೆ ಮಾಡಲು ಯತ್ನಿಸಿದ್ದಾರೆ’ ಎಂದು ಆರೋಪಿಸಿದರು.

‘ಈ ಹಿಂದೆ ಕ್ಷೇತ್ರಕ್ಕೆ ಮಂಜೂರಾಗಿದ್ದ ಎಂಎಸ್ಐಎಲ್ ಮದ್ಯದ ಅಂಗಡಿಗಳನ್ನು ರಾಜಕೀಯ ಒತ್ತಡದಿಂದ ರದ್ದು ಮಾಡಲಾಗಿತ್ತು. ಈಗ ಮತ್ತೆ ಸರ್ಕಾರದಿಂದ ಮತ್ತೆ ನಾಲ್ಕೈದು ಎಂಎಸ್ಐಎಲ್ ಅಂಗಡಿಗಳನ್ನು ಮಂಜೂರು ಮಾಡಿಸಿ ಮತ್ತೆ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದರು.

ADVERTISEMENT

ಪಕ್ಷದ ಹಿರಿಯ ಮುಖಂಡ ದೇವಪ್ಪ ಕಾಮದೊಡ್ಡಿ ಮಾತನಾಡಿ, ‘ನಗರದಲ್ಲಿ ಅನ್ಸಾರಿ ಅವರು ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದಾರೆ. ಕಳೆದ ನಾಲ್ಕು ದಶಕದಿಂದ ಅಕ್ರಮ ಮದ್ಯ ಮಾರಾಟದಿಂದ ಸಾವಿರಾರು ಕೋಟಿ ಮೌಲ್ಯದ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ. ಅವರ ಹಿಂಬಾಲಕರು ನಗರಸಭೆಯಲ್ಲಿ ಸುಮಾರು ಐನ್ನೂರು ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಎಸಗಿದ್ದಾರೆ. 26ರಂದು ನಗರಸಭೆಯಲ್ಲಿ ಸಭೆ ನಡೆಯಲಿದ್ದು, ಹಂತಹಂತವಾಗಿ ಅಕ್ರಮಗಳನ್ನು ಬಯಲಿಗೆಳೆಯುತ್ತೇವೆ. ಖಚಿತಪಡಿಸಿದ್ದಾರೆ.

ಉದ್ಯಮಿ ಪಂಪಾಪತಿ ಸಿಂಗನಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.