ಗಂಗಾವತಿ: ಸರ್ಕಾರಿ ನೌಕರರಿಗೆ ಮಾರಕವಾದ ಎನ್ಪಿಎಸ್ ಯೋಜನೆ ರದ್ದುಪಡಿಸಿ, ಒಪಿಎಸ್ ಯೋಜನೆ ಜಾರಿಗೆ ಮಾಡಬೇಕು ಎಂದು ಒತ್ತಾಯಿಸಿ, ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಗಂಗಾವತಿ ಜುಲೈನಗರದಲ್ಲಿ ಶಾಸಕ ಜಿ.ಜನಾರ್ದನ ರೆಡ್ಡಿ ಅವರಿಗೆ ಶುಕ್ರವಾರ ಮನವಿ ಸಲ್ಲಿ ಸಿದರು.
ಸಂಘಟನೆ ತಾಲ್ಲೂಕು ಅಧ್ಯಕ್ಷ ಶರಣೇಗೌಡ ಪೊಲೀಸ್ ಪಾಟೀಲ ಮಾತನಾಡಿ, 2006ರ ನಂತರ ನೇಮಕವಾದ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ವ್ಯವಸ್ಥೆ ಜಾರಿ ಮಾಡಿದ್ದು, ಈ ವ್ಯವಸ್ಥೆಯಿಂದ ಸರ್ಕಾರಿ ನೌಕರರು ನಿವೃತ್ತಿ ಸಂದರ್ಭದಲ್ಲಿ ಯಾವುದೇ ಸೌಲಭ್ಯವಿಲ್ಲದೇ ಬರಿಗೈಯಲ್ಲಿ ಮನೆಗೆ ಹೋಗಬೇಕಾದ ಪರಿಸ್ಥಿತಿ ಇದೆ. ಹಾಗಿ ಹಳೆ ಪಿಂಚಣಿ ವ್ಯವಸ್ಥೆ ಜಾರಿ ಮಾಡಬೇಕು ಎಂದರು.
ಸರ್ಕಾರಿ ನೌಕರರು ಸರ್ಕಾರದ ಯೋಜನೆಗಳು ಜನರಿಗೆ ತಲುಪಿಸುವಲ್ಲಿ ಪ್ರಾಮಾಣಿಕ ಕೆಲಸ ಮಾಡುತ್ತಿದ್ದು, ಬರುವ ವೇತನದಲ್ಲೇ ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ. ಹೆಚ್ಚಿನ ವೇತನ ನಿರೀಕ್ಷೆಯಲ್ಲಿದ್ದಾಗ ರಾಜ್ಯ 7ನೇ ವೇತನ ಆಯೋಗ ಅನುಷ್ಠಾನ ತಡೆಹಿಡಿದಿದ್ದು, ಸರ್ಕಾರ ಶೀಘ್ರದಲ್ಲೇ 7 ವೇತನ ಜಾರಿಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.
ಸರ್ಕಾರಿ ನೌಕರರಿಗೆ ಮತ್ತು ಕುಟುಂಬದ ಸದಸ್ಯರಿಗೆ ನಗದು ರಹಿತ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಮಾಡಬೇಕು ಎಂದು ಶಾಸಕರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಶಾಸಕರು ಸರ್ಕಾರದ ಗಮನಕ್ಕೆ ತರವುದಾಗಿ ಭರವಸೆ ನೀಡಿದರು.
ಸಂಘಟನೆ ಕಾರ್ಯದರ್ಶಿ ಉಮೇಶ್.ಎಸ್ ಹಾಗೂ ಸರ್ಕಾರಿ ನೌಕರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.