ADVERTISEMENT

ಪೋಲಿಯೊ ಬಾರದಂತೆ ಜಾಗ್ರತೆ ವಹಿಸಿ

ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2020, 9:26 IST
Last Updated 21 ಜನವರಿ 2020, 9:26 IST
ಕೊಪ್ಪಳದ ಗವಿಸಿದ್ದೇಶ್ವರ ಮಠದ ಆವರಣದಲ್ಲಿ ಭಾನುವಾರ ಜಿಲ್ಲಾಮಟ್ಟದ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಚಿಕ್ಕ ಮಕ್ಕಳಿಗೆ ಪೋಲಿಯೊ ಹನಿ ಹಾಕುವ ಮೂಲಕ ಚಾಲನೆ ನೀಡಿದರು
ಕೊಪ್ಪಳದ ಗವಿಸಿದ್ದೇಶ್ವರ ಮಠದ ಆವರಣದಲ್ಲಿ ಭಾನುವಾರ ಜಿಲ್ಲಾಮಟ್ಟದ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಚಿಕ್ಕ ಮಕ್ಕಳಿಗೆ ಪೋಲಿಯೊ ಹನಿ ಹಾಕುವ ಮೂಲಕ ಚಾಲನೆ ನೀಡಿದರು   

ಕೊಪ್ಪಳ: ನಗರದ ಗವಿಸಿದ್ದೇಶ್ವರ ಮಠದ ಆವರಣದಲ್ಲಿ ಭಾನುವಾರ ಜಿಲ್ಲಾಮಟ್ಟದ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಸಂಸದ ಕರಡಿ ಸಂಗಣ್ಣ ಹಾಗೂ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಚಾಲನೆ ನೀಡಿದರು.

ಬಳಿಕ ಸಂಸದ ಕರಡಿ ಸಂಗಣ್ಣ ಮಾತನಾಡಿ,‘ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ 1995-96ರಿಂದ ಎರಡು ಸುತ್ತಿನಲ್ಲಿ ನಡೆದುಕೊಂಡು ಬಂದಿದೆ. ಜಿಲ್ಲೆ ಇಲ್ಲಿಯವರೆಗೆ ಉತ್ತಮ ಪ್ರಗತಿ ಸಾಧಿಸಿದೆ. ಇಲ್ಲಿಯವರೆಗೆ ಕೇವಲ ಎರಡು ದೇಶಗಳು ಮಾತ್ರ ಪೋಲಿಯೊ ಪೀಡಿತ ರಾಷ್ಟ್ರಗಳ ಪಟ್ಟಿಯಲ್ಲಿವೆ’ ಎಂದರು.

ವಿಶ್ವದಾದ್ಯಂತ 2018ರಲ್ಲಿ ಒಟ್ಟಾರೆ 33 ಪೋಲಿಯೊ ಪ್ರಕರಣಗಳು ವರದಿಯಾಗಿವೆ. 2019ರಲ್ಲಿ 143 ಪ್ರಕರಣಗಳು ವರದಿಯಾಗಿವೆ. ಪಾಕಿಸ್ತಾನ (117) ಮತ್ತು ಆಫ್ಘಾನಿಸ್ತಾನದಲ್ಲಿ(26) ಪೋಲಿಯೊ ಪ್ರಕರಣಗಳು ವರದಿಯಾಗಿವೆ ಎಂದರು.

ADVERTISEMENT

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಲಿಂಗರಾಜ ಮಾತನಾಡಿ,‘ಭಾರತದಲ್ಲಿ ಕೊನೆಯ ಪೋಲಿಯೊ ಪ್ರಕರಣ 2011ರ ಜನವರಿಯಲ್ಲಿ ಕಂಡು ಬಂದಿತ್ತು. 2014ರಲ್ಲಿ ಭಾರತಕ್ಕೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಪೋಲಿಯೊ ನಿರ್ಮೂಲನೆ ಪ್ರಮಾಣ ಪತ್ರ ದೊರೆತಿದೆ. ಭಾರತ ಸರ್ಕಾರದ ನಿರ್ದೇಶನದಂತೆ ಮುಂಬರುವ ಜನವರಿ 19ರಿಂದ ಒಂದು ಸುತ್ತಿನ ಪಲ್ಸ್ ಪೋಲಿಯೊ ಕಾರ್ಯಕ್ರಮ ನಡೆಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದ ಮೊದಲನೇ ದಿನ ಪೋಲಿಯೊ ಬೂತ್‌ಗಳಲ್ಲಿ ಹಾಗೂ ನಂತರ 3 ದಿನಗಳಲ್ಲಿ ಮನೆ ಮನೆಯ ಭೇಟಿಯ ಮೂಲಕ 0-5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೊ ಹನಿ ನೀಡಲು ವ್ಯವಸ್ಥೆ ಮಾಡಲಾಗಿದೆ ಹಾಗೂ ಪೋಲಿಯೊ ಖಾಯಿಲೆ ನಿರ್ಮೂಲನೆ ಮಾಡಲು ಹಲವಾರು ಇಲಾಖೆಯ ಅಧಿಕಾರಿಗಳು, ಸ್ಥಳೀಯ ಸಂಘ ಸಂಸ್ಥೆಗಳು, ನೌಕರರು, ಸ್ವಯಂ ಸೇವಕರು, ಸಮುದಾಯದ ಸಹಭಾಗಿತ್ವದೊಂದಿಗೆ ಸಾಕಷ್ಟು ಉತ್ತಮ ಕಾರ್ಯನಿರ್ವಹಿಸುತ್ತಿರುವುದು ಪ್ರಶಂಸನೀಯವಾಗಿದೆ ಎಂದು ಹೇಳಿದರು‌.

‌ಜಿಲ್ಲೆಯ ಒಟ್ಟು 15,44,610 ಜನಸಂಖ್ಯೆಯಲ್ಲಿ 0-5 ವರ್ಷದೊಳಗಿನ ಒಟ್ಟು 1,78,350 ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಈ ಗುರಿಯನ್ನು ಸಾಧಿಸಲು ಜಿಲ್ಲೆಯಲ್ಲಿ ಒಟ್ಟು 878 ಬೂತ್‌ಗಳು. 51 ಟ್ರಾನ್ಸಿಟ್ ಟೀಂಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 19 ಮೊಬೈಲ್ ಟೀಮ್‌ಗಳಂತೆ ಒಟ್ಟು 948 ತಂಡಗಳು ಕಾರ್ಯನಿರ್ವಹಿಸುತ್ತವೆ. ಈ ತಂಡಗಳಲ್ಲಿ ಒಟ್ಟು 1,896 ವ್ಯಾಕ್ಸಿನೇಟರ್‌ಗಳು ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಆರ್‌ಸಿಎಚ್ ಅಧಿಕಾರಿ ಡಾ.ಜಂಬಯ್ಯ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ದಾನರೆಡ್ಡಿ, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಎಸ್.ಕೆ.ದೇಸಾಯಿ, ಕ್ಷಯರೋಗ ನಿಯಂತ್ರಣಾಧಿಕಾರಿ ಮಹೇಶ ಎಂ.ಜಿ, ಆಯುಷ್ ಅಧಿಕಾರಿ ಡಾ.ಬಸವರಾಜ ಕುಕನೂರ, ಡಾ.ಕುಲಕರ್ಣಿ, ನಗರಸಭೆ ಸದಸ್ಯ ಅಮ್ಜದ್ ಪಟೇಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.