ADVERTISEMENT

ಬೆಲೆ ಏರಿಕೆ ನಿಯಂತ್ರಣಕ್ಕೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 8 ಜುಲೈ 2022, 14:15 IST
Last Updated 8 ಜುಲೈ 2022, 14:15 IST
ಕೊಪ್ಪಳದಲ್ಲಿ ಶುಕ್ರವಾರ ಎಸ್‌ಯುಸಿಐ ಕಮ್ಯುನಿಸ್ಟ್‌ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು
ಕೊಪ್ಪಳದಲ್ಲಿ ಶುಕ್ರವಾರ ಎಸ್‌ಯುಸಿಐ ಕಮ್ಯುನಿಸ್ಟ್‌ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು   

ಕೊಪ್ಪಳ: ನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರ ನಗರದಲ್ಲಿ ಎಸ್.ಯು.ಸಿ. ಐ (ಕಮ್ಯುನಿಸ್ಟ್) ವತಿಯಿಂದ ಮಳೆಯ ನಡುವೆಯೇ ಪ್ರತಿಭಟನೆ ನಡೆಯಿತು.

ಪಕ್ಷದ ಜಿಲ್ಲಾ ಮುಖಂಡ ಶರಣಪ್ಪ ಉದ್ಭಳ್ ಮಾತನಾಡಿ ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗೃಹ ಬಳಕೆಯ ಅಡುಗೆ ಅನಿಲ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡುತ್ತಲೆ ಇವೆ. ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ ಇನ್ನಿತರ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಕೋವಿಡ್‌ನಿಂದ ಉದ್ಯೋಗ ಕಳೆದುಕೊಂಡವರು ಬದುಕು ನಡೆಸಲು ಸಂಕಷ್ಟ ಅನುಭವಿಸುತ್ತಿದ್ದಾರೆ‘ ಎಂದರು.

‘ಸರ್ಕಾರಿ ಇಲಾಖೆಗಳಲ್ಲಿನ ಭ್ರಷ್ಟಾಚಾರ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಬೇಕು. ಶಿಕ್ಷಣ ಖಾಸಗೀಕರಣ ಮಾಡಬಾರದು, ನರೇಗಾ ಯೋಜನೆ ನಗರ ಪ್ರದೇಶಕ್ಕೆ ವಿಸ್ತರಿಸಬೇಕು, ಕಾರ್ಪೋರೇಟ್ ಮಾಲೀಕರ ಪರವಾಗಿರುವ ಕೃಷಿ ಕಾಯ್ದೆಗಳನ್ನು ರಾಜ್ಯ ಸರ್ಕಾರ ವಾಪಸ್‌ ಪಡೆಯಬೇಕು, ಆಶಾ, ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

ಜಿಲ್ಲಾ ಸಂಘಟನಾ ಸಮಿತಿ ಸದಸ್ಯ ಶರಣು ಗಡ್ಡಿ, ಮುಖಂಡರಾದ ಸಿದ್ದಲಿಂಗರೆಡ್ಡಿ, ಶರಣು ಪಾಟೀಲ, ರಮೇಶ್ ವಂಕಲಕುಂಟಿ, ಮಂಜುಳಾ, ಗಂಗರಾಜ ಅಳ್ಳಳ್ಳಿ, ಭೀಮ್ ಆರ್ಮಿ ಮುಖಂಡರಾದ ರಾಘು ಚಾಕ್ರಿ, ಅಂಜಿನಪ್ಪ ಅಕ್ಕಮ್ಮ, ಲಲಿತಾ, ಕವಿತಾ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.