ಕೊಪ್ಪಳ: ಸೇವೆ ಕಾಯಂ ಮಾಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ನೌಕರರ ಸಂಘದ (ಟಿಯುಸಿಐ ಸಂಯೋಜಿತ) ಜಿಲ್ಲಾ ಘಟಕದ ಸದಸ್ಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ಮಾಡಿದರು.
ಗವಿಸಿದ್ದೇಶ್ವರ ಮಠದಿಂದ ಜಿಲ್ಲಾಧಿಕಾರಿ ಕಚೇರಿ ತನಕ ಪಾದಯಾತ್ರೆ ನಡೆಸಿದ ಸದಸ್ಯರು ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶ ಕೊಡಬೇಕು, ಸಿಬ್ಬಂದಿಗೆ ಮಾಸಿಕ ಪ್ರೋತ್ಸಾಹ ಧನ ₹8,000ದಿಂದ ₹15 ಸಾವಿರಕ್ಕೆ ಹೆಚ್ಚಳ ಮಾಡಬೇಕು. ಸರ್ಕಾರದಿಂದ ಆದೇಶವಾಗುವ ಎಲ್ಲ ಹೊಸ ಯೋಜನೆಗಳ ಅನುಷ್ಠಾನಕ್ಕೆ ನಮ್ಮನ್ನು ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಅದು ನಿಲ್ಲಬೇಕು ಎಂದು ಆಗ್ರಹಿಸಿದರು. ಈ ಕುರಿತು ಡಿಎಚ್ಒ ಡಿ.ಅಲಕಾನಂದ ಅವರಿಗೆ ಮನವಿ ಸಲ್ಲಿಸಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಹೇಶ ಹೆಬ್ಬಳ್ಳಿ, ಪ್ರಧಾನ ಕಾರ್ಯದರ್ಶಿ ಅಜಯ ದೇವೂರ, ರಾಜ್ಯ ಸಹ ಖಜಾಂಚಿ ಅಕ್ವಿಲ್ ಲಾರೆನ್ಸ್, ಯಲಬುರ್ಗಾ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಇಳಾಲ, ಕೊಪ್ಪಳ ತಾಲ್ಲೂಕು ಘಟಕದ ಅಧ್ಯಕ್ಷ ಸಂತೋಷ ಬಿ., ಜಿಲ್ಲಾ ಘಟಕದ ಉಪಾಧ್ಯಕ್ಷೆ ಲಲಿತಾ ಗೌಡ, ಪ್ರಮುಖರಾದ ಪ್ರಕಾಶ ಜೆ., ನಾಗರಾಜ ವಿ., ನವೀನ ಎನ್., ಆನಂದ ಮನ್ನಾಪುರ, ದುರ್ಗೇಶ, ಪ್ರತಿಭಾ, ರತ್ನಾ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.