ಕೊಪ್ಪಳ: ಅನೇಕ ಕಡೆ ಮಕ್ಕಳು ಮತ್ತು ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಪದಾಧಿಕಾರಿಗಳು ಗುರುವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.
ಸಂಘಟನೆಯ ಜಿಲ್ಲಾ ಸಂಘಟನಾಕಾರ್ತಿ ಮಂಜುಳಾ ಮಜ್ಜಿಗಿ ಮಾತನಾಡಿ ‘ಈಶ್ವರಚಂದ್ರ ವಿದ್ಯಾಸಾಗರ್ ಅವರ 133ನೇ ಸ್ಮರಣಾಚರಣೆಯ ಸಂದರ್ಭದಲ್ಲಿ ಮಹಿಳೆಯರ ಮತ್ತು ಮಕ್ಕಳ ಮೇಲಿನ ಸಾಮಾಜಿಕ ದೌರ್ಜನ್ಯಗಳನ್ನು ತಡೆಗಟ್ಟಲು ಆಗ್ರಹಿಸಿ ಪ್ರತಿಭಟಿಸಲಾಗಿದೆ. ಈ ಯುಗದಲ್ಲಿ ಶಿಕ್ಷಣ ಪಡೆದ ಪ್ರತಿಯೊಬ್ಬ ಹೆಣ್ಣುಮಗಳು ಅತ್ಯಂತ ಕೃತಜ್ಞತೆಯಿಂದ ಸ್ಮರಿಸಿಕೊಳ್ಳಬೇಕಾದ ವ್ಯಕ್ತಿತ್ವ ಈಶ್ವರಚಂದ್ರ ವಿದ್ಯಾಸಾಗರ್ ಹೊಂದಿದ್ದರು’ ಎಂದು ನೆನಪಿಸಿಕೊಂಡರು.
‘ಊಳಿಗಮಾನ್ಯ ವ್ಯವಸ್ಥೆಯ ಪುರುಷ ಪ್ರಧಾನ ಮೌಲ್ಯಗಳ ಜೊತೆಗೆ ಇಂದಿನ ಹೆಣ್ಣು ಭೋಗದ ವಸ್ತು ಎಂಬಂತೆ ಬಿತ್ತರಿಸುವ ಅಶ್ಲೀಲ, ಸಿನಿಮಾ ಸಾಹಿತ್ಯ, ಜಾಹೀರಾತುಗಳು ಜನರ ದಾರಿ ತಪ್ಪಿಸುತ್ತಿವೆ. ಸಮಾಜದಲ್ಲಿ ಅಪರಾಧಗಳು ಹೆಚ್ಚುವಂತೆ ಪ್ರೇರೇಪಿಸುತ್ತಿವೆ. ಸಾಮಾಜಿಕ ವಾತಾವರಣದಲ್ಲಿ ಮೌಲ್ಯಗಳು ಕುಸಿಯುತ್ತಿವೆ’ ಎಂದರು. ಜಿಲ್ಲಾ ಸಂಘಟನೆಕಾರ್ತಿ ಶಾರದಾ ಗಡ್ಡಿ, ಸದಸ್ಯರಾದ ಹುಸೇನ್ ಬಿ. ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.