ಕೊಪ್ಪಳ: ‘ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಂವಿಧಾನಾತ್ಮಕವಾಗಿ ಸ್ವತಂತ್ರ ಸಂಸ್ಥೆಯಾಗಿದ್ದು, ಸಮೀಕ್ಷೆಯಲ್ಲಿ ಪಟ್ಟಿಯಲ್ಲಿ ಹಿಂದೂ ಜಾತಿಗಳ ಮುಂದೆ ಕ್ರಿಶ್ಚಿಯನ್ ಎನ್ನುವುದನ್ನು ಯಾಕೆ ಸೇರಿಸಲಾಗಿದೆ ಎನ್ನುವ ವಿಚಾರವನ್ನು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ. ನಮಗೆ ಸೋನಿಯಾ ಗಾಂಧಿ ಅವರನ್ನು ಮೆಚ್ಚಿಸುವ ಅಗತ್ಯವಿಲ್ಲ’ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರೂ ಆದ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಆಯೋಗ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಆಕ್ಷೇಪಗಳಿದ್ದರೆ ಸಲ್ಲಿಸಲು ಅವಕಾಶವಿದೆ. ಬಿಜೆಪಿ ಜಾತಿ, ಧರ್ಮಗಳ ನಡುವೆ ಗೊಂದಲ ಎಬ್ಬಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದವರು ಇದೇ ರೀತಿ ಮಾಡುತ್ತ ಹೋದರೆ ಎಂದಿಗೂ ಅಧಿಕಾರಕ್ಕೆ ಬರುವುದಿಲ್ಲ’ ಎಂದರು.
‘ನನಗೆ ಯಾವುದೇ ಧರ್ಮ ಇಲ್ಲ. ಇದು ನನ್ನ ವೈಯಕ್ತಿಕ ಹೇಳಿಕೆ. ಸಮೀಕ್ಷೆ ವೇಳೆ ಏನೆಂದು ಬರೆಯಿಸಬೇಕು ಎನ್ನುವ ವಿಚಾರವನ್ನು ಈಗಾಗಲೇ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಪ್ರಮುಖರು ಹೇಳಿದ್ದಾರೆ. ಲಿಂಗಾಯತ ಎನ್ನುವುದು ಧರ್ಮ ಹಾಗೂ ಜಾತಿ ಅಲ್ಲ. ಅದು ತತ್ವ ಆಧಾರಿತ ಚಳವಳಿ, ಹಿಂದೂ ಕೂಡ ಸಂಸ್ಕೃತಿಯೇ. ಸಮೀಕ್ಷೆಯಲ್ಲಿ ಎಸ್.ಸಿ. ಎಂದು ಬರೆಯಿಸಿದರೆ ಅದರ ಪ್ರಮಾಣ ಪತ್ರ ಸಿಗುವುದಿಲ್ಲ. ಈ ಸಮೀಕ್ಷೆ ಜನರ ಸ್ಥಿತಿಗತಿ ಬಗ್ಗೆ ಮಾಹಿತಿ ಸಂಗ್ರಹಕ್ಕೆ ಮಾತ್ರ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.