
ಕೊಪ್ಪಳ: ‘ಸಾಮಾಜಿಕ ಜೀವನದಲ್ಲಿ ತೊಂದರೆಗೊಳಗಾದ ಸಾರ್ವಜನಿಕರಿಗೆ ನ್ಯಾಯ ಒದಗಿಸುವಲ್ಲಿ ವಕೀಲರ ಕಾರ್ಯ ಮಹತ್ವದ್ದಾಗಿದೆ’ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಹೇಳಿದರು.
ಜಿಲ್ಲಾ ವಕೀಲರ ಸಂಘದ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಾರ್ವಜನಿಕ ಆಡಳಿತ ಮತ್ತು ಲೋಕಾಯುಕ್ತ ಕಾಯ್ದೆ-1988 ರ ಅಡಿಯಲ್ಲಿ ವಕೀಲರ ಪಾತ್ರದ ಕುರಿತು ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ‘ನ್ಯಾಯಾಲಯದಲ್ಲಿ ಯಾವುದೇ ಧರ್ಮ, ಜಾತಿ ಭೇದವಿಲ್ಲ. ಇಡೀ ಪ್ರಪಂಚದಲ್ಲಿ ಪವಿತ್ರವಾದ ಮಂದಿರ ನ್ಯಾಯ ಮಂದಿರವಾಗಿದೆ. ನ್ಯಾಯ ಎಂದರೇ ಎಲ್ಲರೂ ತಲೆ ಬಾಗಿಸಲೇಬೇಕು’ ಎಂದರು.
‘ನ್ಯಾಯಾಧೀಶರು, ನ್ಯಾಯವಾದಿಗಳು, ಸಿಬ್ಬಂದಿ ಮತ್ತು ನ್ಯಾಯಾಲಯದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರ ಸಂಕಲ್ಪ ನ್ಯಾಯ ಒದಗಿಸುವುದಾಗಿದೆ. ಇದರಲ್ಲಿ ವಕೀಲರ ಪಾತ್ರವೂ ಪ್ರಮುಖವಾಗಿದೆ. ನ್ಯಾಯಲಯದಲ್ಲಿ ಯಾವುದೇ ಒಂದು ಪ್ರಕರಣವನ್ನು ಇತ್ಯರ್ಥಪಡಿಸಬೇಕಾದರೆ ವಕೀಲರ ಪಾತ್ರ ಅಷ್ಟೇ ಅಲ್ಲದೇ ನ್ಯಾಯಾಧೀಶರ ಮತ್ತು ನ್ಯಾಯಾಂಗ ಇಲಾಖೆಯ ಎಲ್ಲಾ ಅಧಿಕಾರಿ ಸಿಬ್ಬಂದಿಗಳ ಪಾತ್ರವು ಬಹು ಮುಖ್ಯವಾಗಿದೆ’ ಎಂದು ಹೇಳಿದರು.
‘ದೇಶದ ರಕ್ಷಣೆಗಾಗಿ ಸೈನಿಕರು ಗಡಿಯಲ್ಲಿ ಪ್ರತಿನಿತ್ಯ ತಮ್ಮ ಪ್ರಾಣಾರ್ಪಣೆ ಮಾಡುತ್ತಿದ್ದಾರೆ. ಗಡಿಯಲ್ಲಿ ಹಗಲಿರುಳು, ಚಳಿ, ಮಳೆ, ಗಾಳಿ, ಬಿಸಿಲು ಎನ್ನದೇ ತಮ್ಮ ಜೀವದ ಹಂಗನ್ನು ತೊರೆದು ಅವರು ನಮಗಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸ್ವಾತಂತ್ರ್ಯದಿಂದ ಬಂದಂತಹ ನಮ್ಮ ಹಕ್ಕು ಮತ್ತು ಕರ್ತವ್ಯಗಳನ್ನು ಸರಿಪಡಿಸಲು ನ್ಯಾಯಾಂಗದ ಪೆನ್ನು ಗಟ್ಟಿಯಾಗಿರಬೇಕು’ ಎಂದು ಕಿವಿಮಾತು ಹೇಳಿದರು.
ಪ್ರಧಾನ ಜಿಲ್ಲಾ ಮತ್ತು ಸಷೆನ್ಸ್ ನ್ಯಾಯಾಧೀಶ ಸಿ.ಚಂದ್ರಶೇಖರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ ಕಣವಿ, ಕರ್ನಾಟಕ ಲೋಕಾಯುಕ್ತದ ವಿಚಾರಣೆ ಹೆಚ್ಚುವರಿ ನಿಬಂಧಕ ಕಸನಪ್ಪ ನಾಯ್ಕ, ರಮಾಕಾಂತ್ ಚವ್ಹಾಣ ಹಾಗೂ ಅರವಿಂದ ಎನ್.ವಿ., ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ್ ಎಸ್. ದರಗದ, ರಾಯಚೂರು ಲೋಕಾಯುಕ್ತ ಪೊಲೀಸ್ ಎಸ್.ಪಿ. ಸತೀಶ್ ಎಸ್. ಚಿಟಗುಬ್ಬಿ, ಉಪ ವಿಭಾಗಾಧಿಕಾರಿ ಮಹೇಶ ಮಾಲಗಿತ್ತಿ, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಬಿ.ವಿ. ಸಜ್ಜನ್, ಪ್ರಧಾನ ಕಾರ್ಯದರ್ಶಿ ಪ್ರಕಾಶ ಹಾದಿಮನಿ, ನ್ಯಾಯಾಧೀಶರಾದ ಸರಸ್ವತಿ, ಕುಮಾರ್ ಡಿ.ಕೆ. ಹಾಗೂ ಮಲಕರಿ ರಾಮಪ್ಪ ಒಡೆಯರ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.