ADVERTISEMENT

ಸದಾಶಿವ ವರದಿ ಬಹಿರಂಗ ಚರ್ಚೆಗೆ ಒತ್ತಾಯ

Sadashiva report on reservation

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2020, 12:24 IST
Last Updated 18 ಸೆಪ್ಟೆಂಬರ್ 2020, 12:24 IST
ಕುಷ್ಟಗಿಯಲ್ಲಿ ಲಂಬಾಣಿ ಸಮಾಜದ ಪ್ರಮುಖರು ಶಾಸಕ ಅಮರೇಗೌಡ ಬಯ್ಯಾಪುರ ಅವರ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಿದರು
ಕುಷ್ಟಗಿಯಲ್ಲಿ ಲಂಬಾಣಿ ಸಮಾಜದ ಪ್ರಮುಖರು ಶಾಸಕ ಅಮರೇಗೌಡ ಬಯ್ಯಾಪುರ ಅವರ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಿದರು   

ಕುಷ್ಟಗಿ: ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ತರಾತುರಿಯಲ್ಲಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂಥಹ ಏಕಪಕ್ಷಿಯ ತೀರ್ಮಾನ ತೆಗೆದುಕೊಳ್ಳದಂತೆ ತಾಲ್ಲೂಕು ಬಂಜಾರ ಕ್ಷೇಮಾಭಿವೃದ್ಧಿ ಸೇವಾ ಸಂಘ ಸರ್ಕಾರವನ್ನು ಒತ್ತಾಯಿಸಿದೆ.

ಈ ವಿಷಯ ಕುರಿತು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಕೋರಿ ಶಾಸಕ ಅಮರೇಗೌಡ ಬಯ್ಯಾಪುರ ಅವರಿಗೆ ಮನವಿ ಸಲ್ಲಿಸಿದ ಸಂಘದ ಅಧ್ಯಕ್ಷ ಸಂಗಪ್ಪ ಲಮಾಣಿ ಅವರು, ವರದಿಯಲ್ಲಿರುವ ಪ್ರಮುಖ ಅಂಶಗಳ ಬಗ್ಗೆ ಬಹಿರಂಗ ಚರ್ಚೆಗೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಈ ವಿಷಯದಲ್ಲಿ ಸರ್ಕಾರವೂ ಪಾರದರ್ಶಕ ನೀತಿಯನ್ನು ಅನುಸರಿಸಬೇಕಾಗುತ್ತದೆ. ಆದರೆ ಕೆಲ ಶಕ್ತಿಗಳು ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಲಂಬಾಣಿ, ಭೋವಿ, ಕೊರಚ, ಕೊರಮ ಇತರೆ ಜಾತಿಗಳನ್ನು ಹೊರಹಾಕುವ ದುರುದ್ದೇಶದಿಂದ ಅನಗತ್ಯ ಚರ್ಚೆಯನ್ನು ಹುಟ್ಟುಹಾಕಿವೆ. ವರ್ಗೀಕರಣ, ಕೆನೆಪದರು ಎಂಬ ವಿಷಯಗಳನ್ನು ಹರಿಬಿಟ್ಟು ಈ ಸಮುದಾಯಗಳಲ್ಲಿನ ಒಗ್ಗಟ್ಟನ್ನು ಛಿದ್ರಗೊಳಿಸುವ ಹುನ್ನಾರ ನಡೆಸಿವೆ ಎಂದು ಆರೋಪಿಸಿದರು.

ADVERTISEMENT

ಆಯೋಗದ ವರದಿಯ ದೃಢೀಕೃತ ಪ್ರತಿಯನ್ನು ನೀಡಿ ಸಾರ್ವಜನಿಕರು ಅದಕ್ಕೆ ತಕರಾರು, ನ್ಯಾಯಸಮ್ಮತಿ ತಿದ್ದುಪಡಿಗೆ ಕಾಲಾವಕಾಶ ನೀಡಬೇಕು. ಅದೇ ರೀತಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ನಾಗಮೋಹನದಾಸ ಅವರು ಮಾಡಿರುವ ಶಿಫಾರಸುಗಳನ್ನು ಪ್ರಸಕ್ತ ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಬೇಕು ಎಂದು ಒತ್ತಾಯಿಸಿದರು.

ಎಲ್ಲ ಜಾತಿ ಜನಾಂಗಗಳು, ಬುಡಕಟ್ಟು ಸಮುದಾಯಗಳ ವಾಸ್ತವ ಸಂಗತಿಗಳನ್ನು ಆಧರಿಸಿ ಹಿಂದಿನ ಸರ್ಕಾರ ಸಿದ್ಧಪಡಿಸಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯನ್ನು ಬಿಡುಗಡೆ ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಸದಸ್ಯ ವಿಜಯ ನಾಯಕ, ತಾಲ್ಲೂಕು ಪಂಚಾಯಿತಿ ಸದಸ್ಯ ಯಂಕಪ್ಪ ಲಮಾಣಿ, ತಾಲ್ಲೂಕಿನ ಲಂಬಾಣಿ ಸಮುದಾಯದ ಪ್ರಮುಖರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.