ADVERTISEMENT

ದಢೇಸೂಗೂರು ವಿರುದ್ಧ ಅಕ್ಟೋಬರ್‌ನಲ್ಲಿ ಪಾದಯಾತ್ರೆ: ಶಿವರಾಜ ತಂಗಡಗಿ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2022, 12:31 IST
Last Updated 24 ಸೆಪ್ಟೆಂಬರ್ 2022, 12:31 IST
ಶಿವರಾಜ ತಂಗಡಗಿ
ಶಿವರಾಜ ತಂಗಡಗಿ   

ಕೊಪ್ಪಳ: ಪಿಎಸ್‌ಐ ನೇಮಕಾತಿ ಮಾಡಿಸಿಕೊಡುವುದಾಗಿ ₹15 ಲಕ್ಷ ಪಡೆದ ಆರೋಪ ಎದುರಿಸುತ್ತಿರುವ ಕನಕಗಿರಿ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ ದಢೇಸೂಗೂರು ವಿರುದ್ಧ ಅಕ್ಟೋಬರ್‌ನಲ್ಲಿ ಪಾದಯಾತ್ರೆ ನಡೆಸಲಾಗುವುದು ಎಂದು ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ತಂಗಡಗಿ ಹೇಳಿದರು.

ಇಲ್ಲಿ ಶನಿವಾರ ಮಾಧ್ಯಮದವರ ಜೊತೆ ಮಾತನಾಡಿ ‘ಅಧಿವೇಶನದಲ್ಲಿ ಈ ವಿಷಯದ ಚರ್ಚೆ ಏನಾಗುತ್ತದೆ ಎನ್ನುವುದನ್ನು ನೋಡಿಕೊಂಡು ನಿರ್ಧಾರ ಮಾಡಲು ಕಾಯುತ್ತಿದ್ದೆ. ಅ. 1ರಂದು ದಿನಾಂಕ ನಿಗದಿಪಡಿಸಿದ್ದೆ. ಭಾರತ್‌ ಜೊಡೊ ಕಾರ್ಯಕ್ರಮವಿರುವ ಕಾರಣ ಆ ದಿನಾಂಕವನ್ನು ಮುಂದೂಡಲಾಗಿದೆ. ಅಧಿವೇಶನದಲ್ಲಿ ಸರ್ಕಾರ ನಿಖರ ಉತ್ತರ ಕೊಡದೆ ಪಲಾಯನ ಮಾಡಿತು. ಈ ವಿಷಯವನ್ನು ಇಷ್ಟಕ್ಕೆ ಬಿಡುವುದಿಲ್ಲ’ ಎಂದರು.

ತಪ್ಪು ಒಪ್ಪಿಕೊಳ್ಳಲಿ: ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಮಾಧ್ಯಮಗಳ ಮೂಲಕ ಬಹಿರಂಗವಾಗಿದೆ. ಇದನ್ನು ಸರ್ಕಾರ ಒಪ್ಪಿಕೊಳ್ಳಬೇಕು ಎಂದು ಕಾಂಗ್ರೆಸ್‌ ಜಿಲ್ಲಾ ಉಸ್ತುವಾರಿ ಸಂತೋಷ್‌ ಲಾಡ್‌ ಆಗ್ರಹಿಸಿದರು.

ADVERTISEMENT

ಮಾಧ್ಯಮಗಳ ಜೊತೆ ಮಾತನಾಡಿ ‘ಸಿದ್ದರಾಮಯ್ಯ ಅವರು ಭ್ರಷ್ಟಾಚಾರದ ತನಿಖೆ ಮಾಡುವಂತೆ ಒತ್ತಾಯ ಮಾಡಿದ್ದಾರೆ. ಸಿಐಡಿ, ಲೋಕಾಯುಕ್ತದಿಂದಲೂ ತನಿಖೆ ನಡೆಯಲಿ ಎನ್ನುತ್ತಿದ್ದಾರೆ. ಆದರೆ, ಬಿಜೆಪಿ ಸರ್ಕಾರ ತನಿಖೆಗೆ ಹಿಂದೇಟು ಹಾಕುತ್ತಿದೆ. ಸರ್ಕಾರ ಭ್ರಷ್ಟಾಚಾರದಲ್ಲಿ ಸಿಲುಕಿಕೊಂಡಿದೆ. ಆದ್ದರಿಂದಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಜವಾಗಿ ಧಮ್ ಬಗ್ಗೆ ಮಾತನಾಡಿದ್ದಾರೆ’ ಎಂದರು.


ಪೇಸಿಎಂ ಅಭಿಯಾನ ಲಿಂಗಾಯತ ವ್ಯಕ್ತಿಯ ವಿರುದ್ಧವಲ್ಲ. ರಾಜ್ಯದ ಮುಖ್ಯಮಂತ್ರಿ ಎದುರು ಹೋರಾಟ ಮಾಡುತ್ತಿದ್ದೇವೆ. ನಮಗೆ ಎಲ್ಲಾ ಸಮುದಾಯದವರ ಬಗ್ಗೆ ಅಪಾರ ಗೌರವವಿದೆ.
ಶಿವರಾಜ ತಂಗಡಗಿ
-ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.