ಕೊಪ್ಪಳ: ‘ರಾಜ್ಯದಲ್ಲಿರುವ ಶಿಕ್ಷಕರ ಕೊರತೆ ನೀಗಿಸಿದರೆ ಮಾತ್ರ ಶಿಕ್ಷಣ ಕ್ಷೇತ್ರದ ಗಣನೀಯ ಸುಧಾರಣೆ ಸಾಧ್ಯ’ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಬುಧವಾರ ಮಂತ್ರಾಲಯಕ್ಕೆ ತೆರಳುವ ಮೊದಲು ಇಲ್ಲಿ ಮಾಧ್ಯಮದವರ ಜೊತೆ ಮಾತನಾಡಿ ‘ಇಂದು ಒಬ್ಬ ಶಿಕ್ಷಕ ನಿವೃತ್ತಿಯಾದರೆ ಮರುದಿನದ ವೇಳೆಗೆ ಇನ್ನೊಬ್ಬ ಶಿಕ್ಷಕನ ನೇಮಕಾತಿ ಅಗಿರಬೇಕು. ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುವ ಶಿಕ್ಷಕರ ನೇಮಕಾತಿಯಲ್ಲಿ ಸರ್ಕಾರ ಚುರುಕಾಗಬೇಕು’ ಎಂದರು.
‘ಶಾಸಕರು ಸರ್ಕಾರಿ ಶಾಲೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ದತ್ತು ತೆಗೆದುಕೊಂಡು ಕಾಳಜಿ ವಹಿಸಿದರೆ ಮಾತ್ರ ಸರ್ಕಾರಿ ಶಾಲೆಗಳು ಪ್ರಗತಿ ಕಾಣುತ್ತವೆ. ಯಾವುದೇ ಒಬ್ಬ ಅಧಿಕಾರಿ ಹೇಳಿದ ಮಾತು ಕೇಳಿಕೊಂಡು ಜನಪರವಲ್ಲದ ಯೋಜನೆಗಳನ್ನು ಜಾರಿಗೆ ತಂದರೆ ಯಾರಿಗೂ ಪ್ರಯೋಜನವಾಗುವುದಿಲ್ಲ. ಅಧಿಕಾರಿ ಹೇಳಿದ ಮಾತನ್ನು ಸರ್ಕಾರದ ಪ್ರತಿನಿಧಿಗಳು ಮುತುವರ್ಜಿಯಿಂದ ಪರಿಶೀಲಿಸಬೇಕು’ ಎಂದರು.
‘ರಾಜ್ಯದ ಪ್ರತಿ ಸರ್ಕಾರಿ ನೌಕರರ ಮಕ್ಕಳಿಗೆ ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿಯೇ ಶಿಕ್ಷಣ ಕೊಡಿಸಬೇಕು ಎನ್ನುವ ನಿಯಮವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕಾಗಿದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮೇಲಿಂದ ಮೇಲೆ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ, ಸುಧಾರಣೆಗೆ ಅಗತ್ಯ ಕ್ರಮಗಳ ಬಗ್ಗೆ ಜಾಗೃತಿ ವಹಿಸಬೇಕು’ ಎಂದು ಅಭಿಪ್ರಾಯಪಟ್ಟರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.