ADVERTISEMENT

ಬಿಜೆಪಿ ಸರ್ಕಾರದಲ್ಲಿ ಇಬ್ಬರು ಸಿಎಂ: ಸಿದ್ದರಾಮಯ್ಯ ವಾಗ್ದಾಳಿ

ಕೊಪ್ಪಳದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 3 ಜೂನ್ 2020, 12:29 IST
Last Updated 3 ಜೂನ್ 2020, 12:29 IST
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ   

ಕೊಪ್ಪಳ: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ. ಒಬ್ಬರುಸಂವಿಧಾನಾತ್ಮಕವಾಗಿ ಆಯ್ಕೆಯಾದರೆ, ಮತ್ತೊಬ್ಬರು ಅಸಂವಿಧಾನಾತ್ಮಕವಾದ ಮುಖ್ಯಮಂತ್ರಿ ಇದ್ದಾರೆ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಕೊಪ್ಪಳದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷಾಂತರ ಮಾಡಿರುವ ಶಾಸಕರು ಈವರೆಗೆ ನನ್ನನ್ನು ಭೇಟಿ ಮಾಡಿಲ್ಲ. ಆದರೆ, ಅಸಮಾಧಾನಗೊಂಡಿರುವ ಬಿಜೆಪಿಯ ಕೆಲವು ಶಾಸಕರು ಭೇಟಿ ಮಾಡಿದ್ದಾರೆ. ಅವರೇ ಹೇಳುವ ಪ್ರಕಾರ ಬಿಜೆಪಿ ಸರ್ಕಾರದಲ್ಲಿ ಏನೂ ನಡೆಯುತ್ತಿಲ್ಲ. ಇಲ್ಲಿ ಸಂವಿಧಾನಾತ್ಮಕ ಮತ್ತು ಅಸಂವಿಧಾನಾತ್ಮಕ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ. ಮುಖ್ಯಮಂತ್ರಿ ಅವರ ಮಗ ವಿಜಯೇಂದ್ರ ಅಸಂವಿಧಾನಾತ್ಮಕ ಮುಖ್ಯಮಂತ್ರಿ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದರು.

‘ಬಿಜೆಪಿಯವರ ಭಿನ್ನಮತದಲ್ಲಿ ಕಾಂಗ್ರೆಸ್‌ ಪಕ್ಷ ಕೈಹಾಕಲ್ಲ. ಅವರದೇ ಭಿನ್ನಮತದಿಂದ ಸರ್ಕಾರ ಬಿದ್ದರೆ ಅದಕ್ಕೆ ನಾವು ಜವಾಬ್ದಾರರಲ್ಲ. ಮೊದಲು ಸರ್ಕಾರ ಬೀಳಲಿ. ಆ ಬಳಿಕವೇ ಸರ್ಕಾರ ನಿರ್ಮಿಸುವ ಮಾತು. ರಾಜ್ಯದಲ್ಲಿ ಸರ್ಕಾರ ಒಟ್ಟಾರೆಯಾಗಿ ಸತ್ತಿದೆ.ಪ್ರಸ್ತುತ ರಾಜ್ಯದಲ್ಲಿ ಆರ್ಥಿಕಸ್ಥಿತಿ ದಿವಾಳಿಯಾಗಿದೆ. ನೌಕರರಿಗೆ ಸಂಬಳ ನೀಡಲು ಸರ್ಕಾರದ ಬಳಿ ದುಡ್ಡಿಲ್ಲ. ಇದು ಕೇವಲ ರಾಜ್ಯದ ಪರಿಸ್ಥಿತಿಯಲ್ಲ. ಇಡೀ ದೇಶವೇ ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ‘ ಎಂದರು.

ADVERTISEMENT

‘ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದಲ್ಲಿ ಚುನಾವಣೆ ಮುಂದೂಡಲು ಅವಕಾಶ ಇಲ್ಲ. ಸಂವಿಧಾನ ತಿದ್ದುಪಡಿ ಮಾಡದೇ ಬಿಜೆಪಿ ಅವರು ಅದನ್ನು ಮುಂದೂಡಿದ್ದಾರೆ. ರಾಜ್ಯ ಸರ್ಕಾರವು ಕೊರೊನಾ ವೈರಸ್‌ನ ನೆಪವೊಡ್ಡಿ ಮುಂದೂಡಿರುವುದನ್ನು ನಾವು ಖಂಡಿಸುತ್ತೇವೆ. ಈ ಬಗ್ಗೆ ಕೋರ್ಟ್‌ ಮೆಟ್ಟಿಲೇರಲು ಚಿಂತನೆ ನಡೆಸಲಾಗುತ್ತಿದೆ. ನಾಮನಿರ್ದೇಶನ ಮಾಡಲೂ ಸಹ ಸಂವಿಧಾನದಲ್ಲಿ ಯಾವುದೇ ಕಾರಣಕ್ಕೂ ಅವಕಾಶ ಇಲ್ಲ‘ ಎಂದು ಸಿದ್ದರಾಮಯ್ಯ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.