ಗಂಗಾವತಿ: ರಾಜ್ಯ ಸರ್ಕಾರ ಸಂಯೋಜನೆ ಹೆಸರಿನಲ್ಲಿ 6,200 ಸರ್ಕಾರಿ ಶಾಲೆಗಳ ಮುಚ್ಚುವಿಕೆ ವಿರೋಧಿಸಿ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ಸದಸ್ಯರು ಗಂಗಾವತಿ ಬಸ್ ನಿಲ್ದಾಣದ ಎದುರು ಸಹಿ ಸಂಗ್ರಹ ಅಭಿಯಾನ ನಡೆಸಿದರು.
ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ರವಿ ಕಿರಣ ಮಾತನಾಡಿ, ‘ಹಿಂದಿನ ಬಿಜೆಪಿ ಸರ್ಕಾರ 13,800 ಸರ್ಕಾರಿ ಶಾಲೆ ಮುಚ್ಚಲು ಹೊರಟಾಗ ನಮ್ಮ ಸಂಘಟನೆ ಹೋರಾಟದಿಂದ ವಿಚಾರ ಹಿಂಪಡೆದಿತ್ತು. ಈಗ ಕಾಂಗ್ರೆಸ್ ಸರ್ಕಾರ 6 ಸಾವಿರ ಹೆಚ್ಚು ಶಾಲೆಗಳನ್ನ ಮುಚ್ಚಲು ಮುಂದಾಗಿದ್ದು, ಇದನ್ನು ವಿರೋಧಿಸಿ ರಾಜ್ಯದ್ಯಾಂತ 50 ಲಕ್ಷ ಜನ ಸಹಿ ಸಂಗ್ರಹ ಮಾಡಲಾಗುತ್ತಿದೆ. ಎಲ್ಲ ವಿದ್ಯಾರ್ಥಿಗಳು, ಪಾಲಕರು ನಮ್ಮ ಹೋರಾಟ ಬೆಂಬಲಿಸಿ ಸಹಿ ಮಾಡುತ್ತಿದ್ದಾರೆ’ ಎಂದರು.
ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ ಮಾತನಾಡಿ, ‘ರಾಜ್ಯದಲ್ಲಿ 10ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ 6 ಸಾವಿರ ಶಾಲೆಗಳಿಗೆ, 7,821 ಏಕ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. 3,500ಕ್ಕೂ ಹೆಚ್ಚು ಶಾಲೆಗಳಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲ. ಶಾಲಾ ಕಟ್ಟಡಗಳು ದುರಸ್ತಿಗೆ ಕಾದಿವೆ. ಕೊಪ್ಪಳ ಜಿಲ್ಲೆಯಲ್ಲಿ 338 ಶಾಲೆಗಳ ಕೊಠಡಿಗಳು ಶಿಥಿಲವಾದ ಸ್ಥಿತಿಯಲ್ಲಿವೆ. ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ 2542 ಶಿಕ್ಷಕರ ಹುದ್ದೆಗಳು ಖಾಲಿಯಿವೆ. ಜಿಲ್ಲೆಯಲ್ಲಿ 30ಕ್ಕೂ ಹೆಚ್ಚು ಶಾಲೆಗಳು ಮುಚ್ಚುವ ಪಟ್ಟಿಯಲ್ಲಿದ್ದು, ಇದರಲ್ಲಿ ಗಂಗಾವತಿ ಭಾಗದಲ್ಲಿಯೇ 20 ಶಾಲೆಗಳು ಮುಚ್ಚಲಾಗುತ್ತಿದೆ. ಸರ್ಕಾರ ಶಾಲೆಗಳ ಸಮಸ್ಯೆಗಳಿಗೆ ಪರಿಹಾರ ನೀಡದೇ, ಸಂಯೋಜನೆ ಹೆಸರಿನಲ್ಲಿ ಶಾಲೆಗಳನ್ನು ಮುಚ್ಚುತ್ತಿರುವುದು ಸರಿಯಲ್ಲ’ ಎಂದರು.
ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯೆ ಸಿಂಧು.ಕೆ, ಕಾರ್ಯಕರ್ತರಾದ ಸದಾಶಿವ, ಬಾಬು, ದೀಪಾ, ದುರ್ಗಮ್ಮ, ದೇವಮ್ಮ, ರಮೇಶ, ಲಕ್ಷ್ಮಣ, ಶಾಂತಮ್ಮ, ರುದ್ರೇಶ ಸೇರಿದಂತೆ ವಿದ್ಯಾರ್ಥಿಗಳು, ಸಾರ್ವಜನಿಕರು ಅಭಿಯಾನದಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.