ಗಂಗಾವತಿ (ಕೊಪ್ಪಳ): ತಾಲ್ಲೂಕಿನ ಶ್ರೀರಾಮನಗರದ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ಪರೀಕ್ಷೆಯನ್ನು ಬರೆಯಲು ಬಂದಂತಹ ವಿದ್ಯಾರ್ಥಿಗಳು ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಆತಂಕಗೊಳಗಾದೇ ಪರೀಕ್ಷೆಯನ್ನು ಎದುರಿಸಲು ಗ್ರಾಮ ಪಂಚಾಯಿತಿ ಹಾಗೂ ಶಾಲಾ ಆಡಳಿತ ಮಂಡಳಿ ಸಕಲ ಸಿದ್ದತೆಯನ್ನು ಮಾಡುವ ಮೂಲಕ ಶಾಲಾ ಆವರಣದಲ್ಲಿ ಹಬ್ಬದ ವಾತಾವರಣವನ್ನು ನಿರ್ಮಾಣ ಮಾಡಿತ್ತು.
ಪರೀಕ್ಷಾ ಕೇಂದ್ರದ ಹೊರಗಡೆ ವಿದ್ಯಾರ್ಥಿಗಳ ಸ್ವಾಗತಕ್ಕೆ ಬಾಳೆಗೊನೆ, ಮಾವಿನ ತೋರಣದಿಂದ ಅಲಂಕಾರ ಮಾಡಲಾಗಿತ್ತು. ಜೊತೆಗೆ ಆವರಣದ ತುಂಬೆಲ್ಲಾ ಕೊರೊನಾ ಜಾಗೃತಿ ಕುರಿತ ಸಂದೇಶಗಳ ಫಲಕಗಳನ್ನು ಹಾಕಲಾಗಿತ್ತು. ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೇ ಪರೀಕ್ಷೆಯನ್ನು ಎದುರಿಸುವಂತೆ ವಿದ್ಯಾರ್ಥಿಗಳಿಗೆ ಅಧಿಕಾರಿಗಳು, ಶಿಕ್ಷಕರು ಆತ್ಮ ಸ್ಥೈರ್ಯವನ್ನು ತುಂಬಿದರು. ಜೊತೆಗೆ ಅಧಿಕಾರಿಗಳು ಹಾಗೂ ಶಿಕ್ಷಕರು ವಿದ್ಯಾರ್ಥಿಗಳಿಗೆ ಗೌರವ ವಂದನೆ ಸಲ್ಲಿಸುವ ಮೂಲಕ ಪರೀಕ್ಷೆಯನ್ನು ಚೆನ್ನಾಗಿ ಬರೆಯುವಂತೆ ಪ್ರೋತ್ಸಾಹಿಸಿದರು.
ಆವರಣ ಪ್ರವೇಶದಲ್ಲೇ ಎಲ್ಲಾ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡುವ ಮೂಲಕ ಮಾಸ್ಕ್ ಹಾಗೂ ಸ್ಯಾನಿಟೈಜರ್ವಿತರಣೆ ಮಾಡಿದರು. ಜೊತೆಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಸೂಚಿಸಲಾಯಿತು.
ಈ ವೇಳೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಿ.ಮೋಹನ್, ಗ್ರಾಮ ಪಂಚಾಯಿತಿ ಪಿಡಿಒ ಮಹೇಶ್ ಹಾಗೂ ಶಾಲಾ ಸಿಬ್ಬಂದಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.