ADVERTISEMENT

ಫಲಿತಾಂಶ ಸುಧಾರಣೆಗೆ ಒತ್ತು ನೀಡಲು ಸೂಚನೆ 

ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ-1ರ ಫಲಿತಾಂಶ ವಿಶ್ಲೇಷಣೆ ಸಭೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2026, 5:07 IST
Last Updated 24 ಜನವರಿ 2026, 5:07 IST
ಕೊಪ್ಪಳದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್‌ ನೇಗಿ ಮಾತನಾಡಿದರು
ಕೊಪ್ಪಳದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್‌ ನೇಗಿ ಮಾತನಾಡಿದರು   

ಕೊಪ್ಪಳ: ‘ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ-1ರಲ್ಲಿ ಕನಿಷ್ಠ ಅಂಕಗಳ ಸಮೀಪಕ್ಕೆ ಬಂದು ಅನುತ್ತೀರ್ಣರಾಗಿರುವ ಮಕ್ಕಳ ಕುರಿತು ಮತ್ತಷ್ಟು ಕಾಳಜಿವಹಿಸಿ ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ವಿಶೇಷ ಒತ್ತು ನೀಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ ಹೇಳಿದರು.

ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಜಿಲ್ಲಾಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆ-1ರ ಫಲಿತಾಂಶ ವಿಶ್ಲೇಷಣೆ ಕುರಿತು ದತ್ತು ಶಾಲಾ ನೋಡಲ್ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು,‘ಪೂರ್ವಸಿದ್ಧತಾ ಪರೀಕ್ಷೆ-1ರಲ್ಲಿ ಒಂದು ಅಥವಾ ಎರಡು ವಿಷಯಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ‘40 ಪ್ಲಸ್’ ಕಾರ್ಯಕ್ರಮದಡಿ ಒತ್ತು ನೀಡಿ ಫಲಿತಾಂಶ ಸುಧಾರಣೆಗೆ ಕ್ರಮವಹಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿನ ಶಾಲೆಗಳಿಗೆ ಹೆಚ್ಚಾಗಿ ಭೇಟಿ ನೀಡಿ, ಅನುತ್ತೀರ್ಣರಾದ ಮಕ್ಕಳ ಬಗ್ಗೆ ವಿಷಯವಾರು ಕಾಳಜಿ ವಹಿಸಬೇಕು’ ಎಂದು ಸೂಚಿಸಿದರು. 

‘ಶಾಲಾ ಮುಖ್ಯಗುರುಗಳು ಮತ್ತು ಆಯಾ ವಿಷಯ ಶಿಕ್ಷಕರಿಗೆ ಅಗತ್ಯ ಕ್ರಿಯಾಯೋಜನೆ ರೂಪಿಸಲು ಮಾರ್ಗದರ್ಶನ ಮಾಡಬೇಕು. ಜಿಲ್ಲೆಯ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಹೆಚ್ಚಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಎಲ್ಲಾ ದತ್ತು ಶಾಲಾ ನೋಡಲ್ ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದು ನಿರ್ದೇಶನ ನೀಡಿದರು. 

ADVERTISEMENT

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ ಅವರು ಮಾತನಾಡಿ ‘ಜಿಲ್ಲೆಯಲ್ಲಿ 32 ಜನ ನೋಡಲ್ ಅಧಿಕಾರಿಗಳಿಗೆ ತಲಾ 10 ಶಾಲೆಗಳಂತೆ ದತ್ತು ನೀಡಲಾಗಿದ್ದು, ನೋಡಲ್ ಅಧಿಕಾರಿಗಳು ಆಯಾ ಶಾಲೆಗಳಿಗೆ ಭೇಟಿ ನೀಡಿ ತಮಗೆ ದತ್ತು ನೀಡಿದ ಶಾಲೆಗಳ ಫಲಿತಾಂಶ ಶೇ95ಕ್ಕಿಂತ ಹೆಚ್ಚು ಬರುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದರು.

ಸಭೆಯಲ್ಲಿ ಡಯಟ್ ಪ್ರಾಂಶುಪಾಲ ಅನಂತಕುಮಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಯಟ್ ಉಪನ್ಯಾಸಕರು, ವಿಷಯ ಪರಿವೀಕ್ಷಕರು, ಬಿಆರ್‌ಸಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.