ಸಾವು
ಪ್ರಾತಿನಿಧಿಕ ಚಿತ್ರ
ಕೊಪ್ಪಳ: ಯಲಬುರ್ಗಾ ತಾಲ್ಲೂಕಿನ ಹಿರೇವಂಕಲಕುಂಟಾ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಮೃತಪಟ್ಟಿದ್ದಾರೆ. ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಕುಟುಂಬದವರು ಆರೋಪಿಸಿದ್ದಾರೆ.
ಚಿಕಿತ್ಸೆಗಾಗಿ ಮಲ್ಲಮ್ಮ ಕಲ್ಲೂರ್ (23) ದಾಖಲಾಗಿದ್ದರು. ಮಂಗಳವಾರ ಶಸ್ತ್ರಚಿಕಿತ್ಸೆ ವೇಳೆ ಅವರ ಸ್ಥಿತಿ ಗಂಭೀರವಾಗಿದೆ. ಕೂಡಲೇ ವೈದ್ಯ ಡಾ.ಈಶ್ವರ ಸವಡಿ ಅವರು ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದ್ದಾರೆ. ಮಾರ್ಗಮಧ್ಯದಲ್ಲಿಯೇ ಮಲ್ಲಮ್ಮ ಕೊನೆಯುಸಿರೆಳೆದಿದ್ದಾರೆ.
ಮೃತರಿಗೆ ಎರಡೂವರೆ ವರ್ಷ, ಐದು ತಿಂಗಳ ಮಗು ಇದೆ. ಅರಿವಳಿಕೆ ಮದ್ದು ನೀಡದೇ ವೈದ್ಯರು ಚಿಕಿತ್ಸೆ ಮಾಡಿದ್ದೆ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಜಿಲ್ಲಾ ಆಸ್ಪತ್ರೆಗೆ ಬಂದ ಡಿಎಚ್ಒ ಡಾ.ಲಿಂಗರಾಜು ಮತ್ತು ಶಸ್ತ್ರಚಿಕಿತ್ಸೆ ಮಾಡಿದ ಡಾ.ಈಶ್ವರ ಸವಡಿ ಅವರನ್ನು ಕುಟುಂಬಸ್ಥರು ತರಾಟೆಗೆ ತೆಗೆದುಕೊಂಡರು.
‘ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಡಿಎಚ್ಒ ಡಾ.ಲಿಂಗರಾಜು ಪ್ರತಿಕ್ರಿಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.