ಯಲಬುರ್ಗಾ: ‘ಉದ್ಯೋಗ ಖಾತ್ರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ಹಾಗೂ ಮಹಿಳಾ ಕಾರ್ಮಿಕರ ಪಾಲ್ಗೊಳ್ಳುವಿಕೆ ಹೆಚ್ಚಿಸುವ ಉದ್ದೇಶದಿಂದ ಮನೆ ಮನೆಗೆ ಭೇಟಿ ನೀಡಿ ಸರ್ವೇ ಕಾರ್ಯ ಕೈಗೊಳ್ಳಲು ಕ್ರಮಕೈಗೊಳ್ಳಲಾಗುತ್ತಿದೆ’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ ಬಿರಾದಾರ ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಎನ್ಆರ್ಎಲ್ಎಂ ಸ್ವ–ಸಹಾಯ ಸಂಘಗಳ ಸದಸ್ಯರಿಗೆ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
10 ಗ್ರಾಮ ಪಂಚಾಯಿತಿಗಳಲ್ಲಿ ಸೆ.15 ರವರೆಗೆ ಸರ್ವೇ ಕಾರ್ಯ ನಡೆಯಲಿದೆ. ಈ ಸಂದರ್ಭದಲ್ಲಿ ನರೇಗಾ ಯೋಜನೆಯ ಕುರಿತು ಸಮಗ್ರ ಮಾಹಿತಿ ಒದಗಿಸಿ ಅವರಿಂದ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದರು.
ಪುರುಷ ಮತ್ತು ಮಹಿಳೆಯರಿಗೆ ಸಮಾನ ಕೂಲಿ ಇದ್ದರೂ, ರಾಜ್ಯದಲ್ಲಿ ನರೇಗಾ ಯೋಜನೆಯಡಿ ಮಹಿಳೆಯರ ಭಾಗವಹಿಸುವಿಕೆ ಪ್ರಮಾಣ ಶೇ.49 ರಷ್ಟಿದೆ. ಬೆಳಗಾವಿ ಜಿಲ್ಲೆಯ ಕೆಲವು ತಾಲ್ಲೂಕುಗಳನ್ನು ಹೊರತು ಪಡಸಿದರೆ ಉಳಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಪ್ರಮಾಣ ತೀರಾ ಕಡಿಮೆಯಿದೆ. ಈ ಅಂತರ ಹೋಗಲಾಡಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದರು.
ಮನೆ-ಮನೆಗೆ ಭೇಟಿ ನೀಡಿದ ಕಾರ್ಯಕರ್ತೆಯರು ಕಾಮಗಾರಿಗಳ ಕುರಿತು ಮಾಹಿತಿ ನೀಡಿ, ಕೂಲಿ ಕೆಲಸಕ್ಕಾಗಿ ಬೇಡಿಕೆ ಸಲ್ಲಿಸಿದಲ್ಲಿ ನಮೂನೆ-6 ರ ಮೂಲಕ ಬೇಡಿಕೆ ಪಡೆದು ಗ್ರಾಮ ಪಂಚಾಯಿತಿ ಗಮನಕ್ಕೆ ತರಬೇಕಾಗುತ್ತದೆ. ಈ ನಿಟ್ಟಿನಲ್ಲಿ ಮಹಿಳಾ ಕೂಲಿಕಾರರಿಗೆ ಉದ್ಯೋಗ ಒದಗಿಸುವ ಉದ್ದೇಶವಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕಿ ಗೀತಾ ಅಯ್ಯಪ್ಪ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿಕುಮಾರ ಎಲ್, ಚೆನ್ನಬಸನಗೌಡ ಮಾಲಿಪಾಟೀಲ, ಎಂ.ಐ.ಎಸ್ ಸಂಯೋಜಕ ಮಂಜುನಾಥ ಜವಳಿ, ತಾಂತ್ರಿಕ ಸಂಯೋಜಕ ಸಂತೋಷ ನಂದಾಪೂರ, ಐ.ಇ.ಸಿ ಸಂಯೋಜಕ ಲಕ್ಷ್ಮಣ ಕೆರಳ್ಳಿ, ತಾಂತ್ರಿಕ ಸಹಾಯಕ ಚೇತನ ಹಳ್ಳಿ, ನಾಗರಾಜ ಹಳ್ಳಿ, ಸೈಯದ್ ಇಸ್ಮಾಯಿಲ್ ಜಕಾತಿ, ಸಂಗಮೇಶ ಹಿರೇಮಠ, ಬಿ.ಎಫ್.ಟಿ ಗಳಾದ ಬಸಟ್ಟೆಪ್ಪ ಅಂಗಡಿ, ಶಿವಪ್ಪ ಸೂಡಿ ಹಾಗೂ ದೇವಪ್ಪ ಬತ್ತಿ ಸೇರಿ ಹಲವರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.