ಕುಷ್ಟಗಿ: ತಾಲ್ಲೂಕಿನ ಮುದೇನೂರು ಗ್ರಾಮ ಪಂಚಾಯಿತಿಯಲ್ಲಿ ಕಳೆದ ಹಣಕಾಸು ವರ್ಷದಲ್ಲಿ ನರೇಗಾ ಯೋಜನೆಯಲ್ಲಿ ನಡೆದಿದೆ ಎನ್ನಲಾದ ₹ 1.10 ಕೋಟಿ ಹಣ ದುರ್ಬಳಕೆಗೆ ಸಂಬಂಧಿಸಿದಂತೆ ತನಿಖೆ ನಡೆಸಿ ವರದಿ ಸಲ್ಲಿಸಲು ಸರ್ಕಾರ ಆದೇಶಿಸಿದೆ.
ಈ ವಿಷಯ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯಿತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಕೊಪ್ಪಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಡಿ.4 ರಂದು ಪತ್ರ ಬರೆದಿದ್ದಾರೆ. ಪಂಚಾಯಿತಿ ವ್ಯಾಪ್ತಿಯ ತೆಗ್ಗಿಹಾಳ ಗ್ರಾಮಸ್ಥರ ದೂರಿನ ಈ ಕುರಿತು ಆದೇಶ ಹೊರಡಿಸಲಾಗಿದೆ.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶರಣಬಸಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ತಿಮ್ಮಪ್ಪ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಶಾಂತ ಇವರು ಕೆಲಸ ನಡೆಸದಿದ್ದರೂ 34 ಕಾಮಗಾರಿಗಳ ಹೆಸರಿನಲ್ಲಿ ಹಣ ದುರ್ಬಳಕೆ ಮಾಡಿಕೊಂಡಿದ್ದು ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಸರ್ಕಾರಕ್ಕೆ ಆಗಿರುವ ಆರ್ಥಿಕ ನಷ್ಟವನ್ನು ವಸೂಲಿ ಮಾಡುವಂತೆ ಗ್ರಾಮದ ಪರಸಪ್ಪ ಚೌಡ್ಕಿ ಮತ್ತು ನಡುಗಡ್ಡೆಪ್ಪ ಜಗ್ಗಲರ ಎಂಬುವವರು ದಾಖಲೆಗಳ ಸಹಿತ ಸರ್ಕಾರಕ್ಕೆ ದೂರು ಸಲ್ಲಿಸಿದ್ದನ್ನು ಪ್ರಧಾನಕಾರ್ಯದರ್ಶಿ ಪತ್ರದಲ್ಲಿ ವಿವರಿಸಲಾಗಿದೆ.
ಜಿಲ್ಲಾ ಪಂಚಾಯಿತಿಯ ಅಧಿಕಾರಿಗಳ ತನಿಖಾ ತಂಡವನ್ನು ರಚಿಸಿ ದೂರಿನಲ್ಲಿ ಪ್ರಸ್ತಾಪಿಸಿರುವ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿರುವ ಬಗ್ಗೆ ಸ್ಥಳ ತನಿಖೆ ನಡೆಸಿ ಪೂರಕ ದಾಖಲೆಗಳೊಂದಿಗೆ ಒಂದು ತಿಂಗಳ ಒಳಗಾಗಿ ವಾಸ್ತವಾಂಶದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಪ್ರಧಾನ ಕಾರ್ಯದರ್ಶಿ ಸೂಚಿಸಿದ್ದರು. ಆದರೆ ಇಲಾಖೆ ನೀಡಿದ್ದ ಗಡುವು ಮುಗಿದು ತಿಂಗಳು ಗತಿಸಿದರೂ ತನಿಖೆಯೇ ಆರಂಭಗೊಂಡಿಲ್ಲ, ಖುದ್ದಾಗಿ ಜಿಪಂ ಸಿಇಒ ಅವರನ್ನು ಭೇಟಿ ಮಾಡಿ ಬಂದಿದ್ದೇವೆ ಆದರೂ ತನಿಖೆಗೆ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ದೂರುದಾರರು ಬುಧವಾರ ಇಲ್ಲಿ 'ಪ್ರಜಾವಾಣಿ' ಬಳಿ ಅಸಮಾಧಾನ ಹೊರಹಾಕಿದರು.
ಈ ಹಣ ದುರ್ಬಳಕೆಯಲ್ಲಿ ಜಿಲ್ಲಾ ಪಂಚಾಯಿತಿ ಹಿರಿಯ ಅಧಿಕಾರಿ ಭಾಗಿಯಾಗಿರುವ ಕಾರಣಕ್ಕೆ ತನಿಖೆಗೆ ಹಿಂದೇಟು ಹಾಕುತ್ತಿರುವುದು ಸ್ಪಷ್ಟವಾಗಿದೆ ಎಂದು ದೂರುದಾರರಾದ ಪರಸಪ್ಪ ಚೌಡ್ಕಿ, ನಡುಗಡ್ಡೆಪ್ಪ ಜಗ್ಗಲರ ಆರೋಪಿಸಿದರು.
ಈ ಕುರಿತು ಮಾಹಿತಿಗಾಗಿ ಸಂಪರ್ಕಿಸಿದರೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಫೌಜಿಯಾ ತರನುಮ್ಮ ಯಾವುದೇ ಮಾಹಿತಿ ನೀಡಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.