ಹನುಮಸಾಗರ: ‘ಕನ್ನಡ ಭವನ ನಿರ್ಮಾಣ ಕಾರ್ಯ ಬಹುತೇಕ ಮುಗಿಯುವ ಹಂತದಲ್ಲಿದೆ. ಆವರಣಗೋಡೆಯ ಕೆಲಸ ಮುಗಿದರೆ ಜಿಲ್ಲಾ ಘಟಕದ ಪದಾಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲಿಯೇ ಉದ್ಘಾಟನೆ ಮಾಡುವ ಉದ್ದೇಶ ಇದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಹೋಬಳಿ ಘಟಕದ ಅಧ್ಯಕ್ಷ ಲಂಕೇಶ ವಾಲಿಕಾರ ತಿಳಿಸಿದರು.
ನಿರ್ಮಾಣ ಹಂತದ ಕನ್ನಡ ಭವನ ಕಟ್ಟಡದಲ್ಲಿ ನಡೆದ ಪದಾಧಿಕಾರಿಗಳ ಸಭೆಯ ಬಳಿಕ ಆವರಣ ಗೋಡೆ ನಿರ್ಮಾಣಕ್ಕೆ ಕ್ರಮಕೈಗೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ ಶ್ರೀಶೈಲ ಮೋಟಗಿಯವರಿಗೆ ಮನವಿ ಸಲ್ಲಿಸಿ ಮಾತನಾಡಿದರು.
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ನೀಡಿದ ₹15 ಲಕ್ಷ ಅನುದಾನದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಇಷ್ಟರಲ್ಲಿಯೇ ವಿದ್ಯುತ್ ಪೂರೈಕೆಯಾಗಲಿದೆ. ಬಣ್ಣ ಬಳಿಯುವ ಕಾರ್ಯ ನಡೆಯಲಿದೆ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಸದಸ್ಯ ಶ್ರೀಶೈಲ ಮೋಟಗಿ ಮನವಿ ಸ್ವೀಕರಿಸಿ ಮಾತನಾಡಿ,‘ಆವರಣ ಗೋಡೆ ನಿರ್ಮಾಣದ ಕುರಿತು ಈಗಾಗಲೇ ಚರ್ಚಿಸಲಾಗಿದೆ. ₹8 ಲಕ್ಷ ಕ್ರಿಯಾ ಯೋಜನೆ ತಯಾರಿಸಿ ಅನುದಾನ ಮೀಸಲಿರಿಸಲಾಗಿದೆ. ಅನುಮೋದನೆ ದೊರೆತ ಬಳಿಕ ಗೋಡೆ ನಿರ್ಮಾಣ ಕಾರ್ಯ ಆರಂಭವಾಗಲಿದೆ’ ಎಂದು ಭರವಸೆ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಹೋಬಳಿ ಘಟಕದ ಪದಾಧಿಕಾರಿಗಳಾದ ಮಲ್ಲಯ್ಯ ಕೋಮಾರಿ, ಅಬ್ದುಲ್ ಕರೀಮ ವಂಟೆಳಿ, ಎಂ.ಡಿ.ನಂದವಾಡಗಿ, ಮಂಜುನಾಥ ಹುಲ್ಲೂರ, ಅಬ್ದುಲ್ರಜಾಕ್ ಟೇಲರ್, ಶ್ರೀನಿವಾಸ ಜಹಗೀರದಾರ ಹಾಗೂ ನಿಂಗನಗೌಡ ಪಾಟೀಲ ಅವರು
ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.