ಕುಕನೂರು: ‘ಎರಡನೇ ಡೋಸ್ ಲಸಿಕೆಯನ್ನೂ ಸಮಯಕ್ಕೆ ಸರಿಯಾಗಿ ಶೇ 100 ರಷ್ಟು ಸಾಧನೆ ಮಾಡಬೇಕು. ಇದಕ್ಕೆ ಗ್ರಾಮ ಪಂಚಾಯಿತಿ ಸದಸ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ಎಲ್ಲರೂ ಕಾರ್ಯೋನ್ಮುಖರಾಗಬೇಕು‘ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಹೇಳಿದರು.
ತಾಲ್ಲೂಕಿನ ಬಾನಾಪೂರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಕೋವಿಡ್-19 ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಇಂದು 60 ಸಾವಿರ ಲಸಿಕೆ ನೀಡಬೇಕು ಎನ್ನುವ ಗುರಿ ಹೊಂದ ಲಾಗಿದ್ದು, ಈಗಾಗಲೇ ಸಾರ್ವಜನಿಕರ ಮನವೊಲಿಸಿ ಲಸಿಕೆ ಹಾಕಿಸಿದ್ದೇವೆ. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಅಭೂತಪೂರ್ವ ಕೆಲಸ ಮಾಡಿದ್ದಾರೆ. ತಮ್ಮ ಜೀವವನ್ನೇ ಪಣಕಿಟ್ಟು ಕಾರ್ಯನಿರ್ವಹಿಸುತ್ತಿದ್ದಾರೆ. ನಮ್ಮ ಕ್ಷೇತ್ರದಲ್ಲಿ 10 ಗ್ರಾಮಗಳಲ್ಲಿ ಶೇ 100 ರಷ್ಟು ಲಸಿಕೆ ಪೂರ್ಣಗೊಂಡಿದೆ. ಎರಡನೇ ಡೋಸ್ ಲಸಿಕೆಯನ್ನು ಎಲ್ಲರೂ ಪಡೆಯುವ ಮೂಲಕ ಸಮಾಜ ಮುಖಿ ಕೆಲಸ ಮಾಡೋಣ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು ಮಾತನಾಡಿ, ಕಡಿಮೆ ಅವಧಿಯಲ್ಲಿಯೇ ಹೆಚ್ಚಿನ ಕೋವಿಡ್ ಲಸಿಕೆ ಹಾಕಿಸಿದ ದೇಶ ಎಂಬ ಹೆಮ್ಮೆ ನಮಗಿದೆ. ಕೋವಿಡ್ ಲಸಿಕೆ ಹಾಕಿಸಿಕೊಳ್ಳುವುದರಿಂದ ಕೋವಿಡ್ ಸೋಂಕು ತಗಲುವುದಿಲ್ಲ. ಸೋಂಕು ತಗುಲಿದರೂ ಸಹ ಸಾವಿನ ಪ್ರಮಾಣ ಕಡಿಮೆ ಇರುತ್ತದೆ. ಸಾರ್ವಜನಿಕರು ಕೋವಿಡ್ ಲಸಿಕೆಯ ಕುರಿತು ನಕಾರಾತ್ಮಕ ಯೋಚನೆ ಮಾಡದೇ ಎಲ್ಲರೂ ಲಸಿಕೆ ಪಡೆಯಬೇಕು ಎಂದು ಹೇಳಿದರು.
ಲಸಿಕಾ ವಾಹನಕ್ಕೆ ಚಾಲನೆ: ಕೋವಿಡ್-19 ಲಸಿಕಾ ವಾಹನಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪವಿತ್ರಾ ಬಂಗೇರ್ ಚಾಲನೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಫೌಜಿಯಾ ತರನ್ನುಮ್, ಯೋಜನಾಧಿಕಾರಿ ಕೃಷ್ಣಮೂರ್ತಿ, ತಹಶೀಲ್ದಾರ್ ಕಿರಣಕುಮಾರ್, ತಾಲ್ಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ್, ಜಿಲ್ಲಾ ಪಶು ಸಂಗೋಪನೆ ಇಲಾಖೆಯ ಉಪನಿರ್ದೇಶಕ ನಾಗರಾಜ, ಶಂಭು ಜೋಳದ್, ಬಸನಗೌಡ ತೊಂಡಿಹಾಳ, ಕಳಕಪ್ಪ ಕಂಬಳಿ, ಶಿವಕುಮಾರ ನಾಗಲಾಪೂರಮಠ, ಮಾರುತಿ ಗಾವರಾಳ, ನೀಲಕಂಠಯ್ಯ ಸಸಿಮಠ, ರಾಮಣ್ಣ ಕೋಮಲಾಪುರ, ಸಿದ್ಧಲಿಂಗಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.