ADVERTISEMENT

‘ನೀರಾವರಿ ಯೋಜನೆ ಅನುಷ್ಠಾನಕ್ಕೆ ಬದ್ಧ’

​ಪ್ರಜಾವಾಣಿ ವಾರ್ತೆ
Published 27 ಜೂನ್ 2020, 8:10 IST
Last Updated 27 ಜೂನ್ 2020, 8:10 IST
ಯಲಬುರ್ಗಾ ತಾಲ್ಲೂಕು ಬಸಾಪುರ ಗ್ರಾಮದಲ್ಲಿ ಕೆರೆ ತುಂಬಿಸುವ ಯೋಜನೆಯ ಭೂಮಿಪೂಜೆ ಕಾರ್ಯಕ್ರಮದಲ್ಲಿ ಸಚಿವ ರಮೇಶ್‌ ಜಾರಕಿಹೊಳಿ ಮಾತನಾಡಿದರು (ಎಡಚಿತ್ರ). ಕಾರಟಗಿ ತಾಲ್ಲೂಕಿನ ಮೈಲಾಪುರ ಬಳಿ ಎಡದಂಡೆ ಕಾಲುವೆಯ ಲೈನಿಂಗ್ ಕಾಮಗಾರಿಗೆ ಸಚಿವ ರಮೇಶ್ ಜಾರಕಿಹೊಳಿ ಭೂಮಿಪೂಜೆ ನೆರವೇರಿಸಿದರು
ಯಲಬುರ್ಗಾ ತಾಲ್ಲೂಕು ಬಸಾಪುರ ಗ್ರಾಮದಲ್ಲಿ ಕೆರೆ ತುಂಬಿಸುವ ಯೋಜನೆಯ ಭೂಮಿಪೂಜೆ ಕಾರ್ಯಕ್ರಮದಲ್ಲಿ ಸಚಿವ ರಮೇಶ್‌ ಜಾರಕಿಹೊಳಿ ಮಾತನಾಡಿದರು (ಎಡಚಿತ್ರ). ಕಾರಟಗಿ ತಾಲ್ಲೂಕಿನ ಮೈಲಾಪುರ ಬಳಿ ಎಡದಂಡೆ ಕಾಲುವೆಯ ಲೈನಿಂಗ್ ಕಾಮಗಾರಿಗೆ ಸಚಿವ ರಮೇಶ್ ಜಾರಕಿಹೊಳಿ ಭೂಮಿಪೂಜೆ ನೆರವೇರಿಸಿದರು   

ಯಲಬುರ್ಗಾ: ಕೆರೆಗಳ ಸಮಗ್ರ ಅಭಿವೃದ್ಧಿಯಿಂದ ಈ ಭಾಗ ಹೆಚ್ಚು ಸಮೃದ್ಧಿಯಾಗುವುದರಿಂದ ತ್ವರಿತಗತಿಯಲ್ಲಿ ನೀರು ತುಂಬಿಸುವ ಯೋಜನೆಯ ಅನುಷ್ಠಾನಕ್ಕೆ ಪ್ರಯತ್ನಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದರು.

ತಾಲ್ಲೂಕಿನ ಬಸಾಪೂರು ಕ್ರಾಸ್ ಬಳಿ ಶುಕ್ರವಾರ ಕೊಪ್ಪಳ ಏತ ನೀರಾವರಿ ಯೋಜನೆ ಅಡಿಯಲ್ಲಿ 24 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಮಳೆಯಾಶ್ರಿತ ಈ ಪ್ರದೇಶದಲ್ಲಿ ಕೆರೆಗಳು ಹೆಚ್ಚು ಮಹತ್ವ ಪಡೆದುಕೊಂಡಿವೆ. ಅವುಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು.

ADVERTISEMENT

ಶಾಸಕ ಹಾಲಪ್ಪ ಆಚಾರ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ನುಡಿದಂತೆ ಈಗ ನಡೆದುಕೊಳ್ಳುತ್ತಿದ್ದೇವೆ. ಕೆರೆ ತುಂಬುವ ಯೋಜನೆ ಕಾಮಗಾರಿಗೆ ಚಾಲನೆ ದೊರೆತಿದೆ. ಅಭಿವೃದ್ಧಿ ಸಹಸದೆ ಕೆಲ ಕಾಂಗ್ರೆಸ್ ಮುಖಂಡರು ನೀರಾವರಿ ಯೋಜನೆಗೆ ಅಡ್ಡಗಾಲು ಎಂದು ಅಪಹಾಸ್ಯ ಮಾಡಿದ್ದರು ಎಂದು ನುಡಿದರು.

ಕೊಪ್ಪಳ ಸಂಸದ ಕರಡಿ ಸಂಗಣ್ಣ ಮಾತನಾಡಿದರು.

‘ರೈತಪರ ನೀರಾವರಿ ಯೋಜನೆಗಳಿಗೆ ಆದ್ಯತೆ’

ಕಾರಟಗಿ: ರೈತಪರ ನೀರಾವರಿ ಯೋಜನೆಗಳ ಜಾರಿಗೆ ಆದ್ಯತೆ ನೀಡಲಾಗುವುದು. ತಿಂತಿಣಿ, ನವಲಿಯ ಜಲಾಶಯ ಯೋಜನೆಗಳು ಪೂರ್ಣಗೊಂಡರೆ ರಾಯಚೂರು, ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಯ ಜನರ ನೀರು, ವಿದ್ಯುತ್ ಸಮಸ್ಯೆ ಬಗೆಹರಿಯಲಿದೆ ಎಂದು ಜಲಸಂಪನ್ಮೂಲ‌ ಸಚಿವ ರಮೇಶ್ ಜಾರಕಿಹೊಳಿ ಅವರು
ಹೇಳಿದರು.

ತಾಲ್ಲೂಕಿನ ಮೈಲಾಪುರ ಬಳಿ ತುಂಗಭದ್ರಾ ಎಡದಂಡೆ ಕಾಲುವೆಯ 0 ಮೈಲ್‌ನಿಂದ 47ನೇ ಮೈಲ್‌ವರೆಗಿನ ವ್ಯಾಪ್ತಿಯಲ್ಲಿ ₹59 ಕೋಟಿ ವೆಚ್ಚದ ಸಿಸಿ ಲೈನಿಂಗ್, ಆಧುನೀಕರಣ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ನೇರವೇರಿಸಿ ಅವರು ಮಾತನಾಡಿದರು.

₹14.30 ಕೋಟಿ ವೆಚ್ಚದ ನವಲಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಸರ್ವೆ ಕಾಮಗಾರಿ ಪ್ರಾರಂಭವಾಗಿದೆ ಎಂದರು.

ಸಂದಸ ಸಂಗಣ್ಣ ಕರಡಿ, ಶಾಸಕ ಬಸವರಾಜ ದಢೇಸುಗೂರು ಮಾತನಾಡಿದರು.

31ನೇ ವಿತರಣೆ ಕಾಲುವೆಯ ಕೆಳಭಾಗದ ರೈತರಿಗೆ ನೀರು ತಲುಪುತ್ತಿಲ್ಲ. ಸಮಸ್ಯೆ ಪರಿಹರಿಸುವ ಉದ್ದೇಶದಿಂದ ₹160 ಕೋಟಿ ವೆಚ್ಚದ ಏತ ನೀರಾವರಿ ಯೋಜನೆ ಪ್ರಾರಂಭಿಸಲಾಗಿದೆ. ಸರ್ವೆ ನಂ. 6ರಲ್ಲಿ ಕೆಲವರು ಆಕ್ಷೇಪಿಸಿ ಕೆಲಸ ನಿಲ್ಲಿಸಿದ್ದಾರೆ. ಸಮಸ್ಯೆಯನ್ನು ಸರಿಪಡಿಸಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಜಲ ಸಂಪನ್ಮೂಲ ಸಚಿವರಿಗೆ ಬೂದಗುಂಪಾ ನೀರು ಬಳಕೆದಾರರ ಸಂಘದ ಅಧ್ಯಕ್ಷ ಸಂಗಮೇಶಗೌಡ ಮನವಿಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.