ಕೊಪ್ಪಳ: ಮಹಿಳೆಯರು ಸಾಮಾಜಿಕವಾಗಿ ಪ್ರಗತಿ ಸಾಧಿಸಬೇಕಾದರೆ ಸ್ವಾವಲಂಬಿ ಬದುಕು ಕಟ್ಟಿಕೊಂಡಾಗ ಮಾತ್ರ ಸಾಧ್ಯ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹೇಳಿದರು.
ಜಿಲ್ಲಾಡಾಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರು ರಾಜಕೀಯ, ಉದ್ಯಮ, ಆಡಳಿತ ಕ್ಷೇತ್ರಗಳಲ್ಲಿ ಮುಂದೆ ಬಂದರೆ ಸಾಮಾಜಿಕವಾಗಿ ಸದೃಢರಾಗಲು ಸಾಧ್ಯ. ಮಹಿಳೆಯರು ಆರ್ಥಿಕವಾಗಿ ಸ್ವತಂತ್ರರಾಗಬೇಕು. ಈ ಸಮಾಜದಲ್ಲಿ ಆರ್ಥಿಕತೆಗೆ ತಕ್ಕಂತೆ ಬೆಲೆ ಸಿಗುವುದರಿಂದ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ ಎಂದರು.
ಭ್ರೂಣ ಹತ್ಯೆ ಪ್ರಪಂಚಕ್ಕೆ ಮಾರಕವಾಗಿದ್ದು. ಹೆಣ್ಣು ಹೆತ್ತರೆ 80 ವರ್ಷ ಯೋಚಿಸುವ ದುಃಸ್ಥಿತಿ ಸಮಾಜದಲ್ಲಿ ನಿರ್ಮಾಣವಾಗಿದೆ. ಆದರಿಂದ ಮಹಿಳೆಯರು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ಹೆಣ್ಣಿನ ಬಗ್ಗೆ ಇರುವ ತಪ್ಪು ಭಾವನೆಗಳು ತೊಲಗುತ್ತವೆ ಎಂದರು.
ಸುತ್ತಮುತ್ತಲಿನ ವಾತಾವರಣದಲ್ಲಿ ನಿಮ್ಮ ಸ್ವಾವಲಂಬಿ ಜೀವನ ಸ್ಫೂರ್ತಿಯಾಗಲಿ. ಸರ್ಕಾರದ ಅನೇಕ ಯೋಜನೆಗಳು ಮತ್ತು ಕಾಯ್ದೆಗಳು ಮಹಿಳೆ ಪರವಾಗಿದ್ದು, ಅವುಗಳನ್ನು ಉಪಯೋಗಿಸಿಕೊಂಡು ಮುಂದೆ ಬನ್ನಿ ಎಂದು ಸಲಹೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಅಕ್ಕಮಹಾದೇವಿ ಅವರು ಮಾತನಾಡಿ, ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು 1977ರಲ್ಲಿ ವಿಶ್ವಸಂಸ್ಥೆಯಲ್ಲಿ ಅನುಮೋದಿ
ಸಲಾಯಿತು. ಸವಾಲುಗಳನ್ನು ಸ್ವೀಕರಿಸೋಣ ಎಂಬುವುದು ಈ ವರ್ಷದ ಧ್ಯೇಯ ವಾಕ್ಯವಾಗಿದ್ದು. ಆ ನಿಟ್ಟಿನಲ್ಲಿ ಮಹಿಳೆಯರು ತಮಗೆ ಬರುವ ಸವಾಲುಗಳನ್ನು ಮೆಟ್ಟಿ ಸಾಧನೆಯ ಶಿಖರವನ್ನು ಏರಬೇಕು ಎಂದು ಸಲಹೆ ನೀಡಿದರು.
ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳಾ ಸಾಧಕರು ಹಾಗೂ ಸೇವಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಧರಣಿ ಸಸಿ ನಿರೂಪಿಸಿದರು. ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರೇಮಾ ಈರಪ್ಪ ಕುಡಗುಂಟಿ, ಪಾಯಲ್ ಸುರಳ್ಕರ್, ಸಾಮಾಜಿಕ ಕಾರ್ಯಕರ್ತೆ ದಿವ್ಯ ಜೋಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಅಲಕನಂದಾ ಮಳಗಿ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಈ ವೇಳೆ
ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.