
ಯಲಬುರ್ಗಾ: ಇಲ್ಲಿನ ಸಿದ್ಧರಾಮೇಶ್ವರ ವಿದ್ಯಾಪೀಠದ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ವಿಜ್ಞಾನ ವಸ್ತುಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಸಂಸ್ಥೆಯ ಅಧ್ಯಕ್ಷ ಹಾಗೂ ಸಂಸ್ಥಾನ ಹಿರೇಮಠದ ಪೀಠಾಧಿಕಾರಿ ಸಿದ್ದರಾಮೇಶ್ವರ ಸ್ವಾಮೀಜಿ ಭೇಟಿ ನೀಡಿ ಪ್ರದರ್ಶನ ವೀಕ್ಷಿಸಿದರು.
ನಂತರ ಮಾತನಾಡಿದ ಸ್ವಾಮೀಜಿ, ‘ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಲ್ಲಿ ಲವಲವಿಕೆಯಿತ್ತು. ಕೆಲ ಪ್ರದರ್ಶನಗಳು ಆಕರ್ಷಣೆಯಾಗಿದ್ದವು. ಈ ಮಾದರಿಯ ಪ್ರದರ್ಶನಗಳು ಮಕ್ಕಳಲ್ಲಿ ಕ್ರಿಯಾತ್ಮಕ ಯೋಜನೆಗಳು, ಸ್ಪರ್ಧಾತ್ಮಕ ಮನೋಭಾವಗಳು ಬೆಳೆಯುತ್ತವೆ. ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ಹೆಚ್ಚುತ್ತವೆ. ಈ ಕಾರಣಗಳಿಂದ ಆಗಾಗ ಈ ರೀತಿಯ ವಸ್ತು ಪ್ರದರ್ಶನಗಳು ಮಕ್ಕಳ ವ್ಯಕ್ತಿತ್ವ ವಿಕಾಸಕ್ಕೆ ಕಾರಣವಾಗುತ್ತವೆ’ ಎಂದು ಹೇಳಿದರು.
ಪ್ರತಿವರ್ಷ 28ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮೂಲಕ ಮೂಲಕ ಸಿ.ವಿ.ರಾಮನ್ ಅವರನ್ನು ಸ್ಮರಿಸಲಾಗುತ್ತದೆ. ಅವರ ಸಾಧನೆ ಮತ್ತು ವ್ಯಕ್ತಿತ್ವದ ಬಗ್ಗೆ ವಿದ್ಯಾರ್ಥಿಗಳು ಅಧ್ಯಯನ ಮಾಡಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಉತ್ತಮ ವಸ್ತುಪ್ರದರ್ಶನಗಳಿಗೆ ಬಹುಮಾನ ವಿತರಿಸಲಾಯಿತು. ಮುಖ್ಯಶಿಕ್ಷಕ ಎಸ್.ಡಿ. ಅಪ್ಪಾಜಿ, ಬಸವರಾಜ ಜಾರಗಡ್ಡಿಮಠ ಸೇರಿ ವಿವಿಧ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.