ಬೆಳಗಾವಿ: ‘ನಾನು ಬಿಜೆಪಿ ಸೇರಲು ಹಣ ಪಡೆದಿದ್ದೇನೆ ಎಂದು ವಿರೋಧಪಕ್ಷದವರು ವ್ಯಾಪಕವಾಗಿ ಅಪಪ್ರಚಾರ ನಡೆಸಿದ್ದರು. ಅವರು ಮಾಡುತ್ತಿರುವ ಆರೋಪಗಳು ಸತ್ಯಕ್ಕೆ ದೂರವಾಗಿದ್ದವು. ಅವರಿಗೆ ಪ್ರಜ್ಞಾವಂತ ಮತದಾರರು ಸರಿಯಾದ ಉತ್ತರ ನೀಡಿದ್ದಾರೆ’ ಎಂದು ಅಥಣಿ ಕ್ಷೇತ್ರದ ವಿಜೇತ ಅಭ್ಯರ್ಥಿ ಮಹೇಶ ಕುಮಠಳ್ಳಿ ಹೇಳಿದರು.
‘ಕ್ಷೇತ್ರದ ಜನರು ಹಾಗೂ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅಭಿವೃದ್ಧಿಗಾಗಿ ಹಂಬಲಿಸಿ ಬಿಜೆಪಿ ಸೇರಿದ್ದೇನೆ. ಅದನ್ನು ಜನರು ಬೆಂಬಲಿಸಿದ್ದಾರೆ. ಸರ್ಕಾರದ ಮೂಲಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ’ ಎಂದು ಪ್ರತಿಕ್ರಿಯಿಸಿದರು.
ಕ್ಷೇತ್ರದ ಪರಾಜಿತ ಅಭ್ಯರ್ಥಿ ಗಜಾನನ ಮಂಗಸೂಳಿ ಪ್ರತಿಕ್ರಿಯೆಗೆ ಲಭ್ಯವಾಗಲಿಲ್ಲ. ಅವರ ಮೊಬೈಲ್ ಫೋನ್ ಸ್ವಿಚ್ಡ್ಆಫ್ ಆಗಿತ್ತು.
ಸತ್ಯಕ್ಕೆ ಸಿಕ್ಕ ಮತ್ತೊಂದು ಗೆಲುವು
‘ಕ್ಷೇತ್ರದಲ್ಲಿ ಭ್ರಷ್ಟಾಚಾರ ಹಾಗೂ ಗೂಂಡಾಗಿರಿ ವಿರುದ್ಧ ಸತ್ಯಕ್ಕೆ ಮತ್ತೊಂದು ಜಯ ದೊರೆತಿದೆ. ಮತದಾರರು ನನ್ನ ಮೇಲೆ ವಿಶ್ವಾಸವಿಟ್ಟು ಆಶೀರ್ವಾದ ಮಾಡಿದ್ದಾರೆ. ಅವರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ನಡೆದುಕೊಳ್ಳುತ್ತೇನೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ’ ಎಂದು ಕಾಗವಾಡದ ವಿಜೇತ ಅಭ್ಯರ್ಥಿ, ಬಿಜೆಪಿಯ ಶ್ರೀಮಂತ ಪಾಟೀಲ ಪ್ರತಿಕ್ರಿಯಿಸಿದರು.
ಕಾಗವಾಡದ ಕಾಂಗ್ರೆಸ್ ಅಭ್ಯರ್ಥಿ ಭರಮಗೌಡ (ರಾಜು) ಕಾಗೆ ಪ್ರತಿಕ್ರಿಯೆಗೆ ಲಭ್ಯವಾಗಲಿಲ್ಲ. ಮೊಬೈಲ್ ಫೋನ್ ಸ್ವಿಚ್ಡ್ಆಫ್ ಆಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.