ನಾಗಮಂಗಲ: ಬಾಲಕಾರ್ಮಿಕ ಪದ್ಧತಿ ಅಳಿಸಿ, ಮಕ್ಕಳಲ್ಲಿ ಶಿಕ್ಷಣವನ್ನು ಅರಳಿಸುವ ಹೊಣೆ ನಮ್ಮೆಲ್ಲರದ್ದಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಭಾರತಿ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಮೈಲಾರಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ, ತಾಲ್ಲೂಕು ಕಾನೂನು ಸೇವಾ ಸಮಿತಿ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಗುರುವಾರ ಆಯೋಜಿಸಿದ್ದ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಮತ್ತು ಮಾನವ ಕಳ್ಳ ಸಾಗಾಣೆ ನಿಯಂತ್ರಣ ಹಾಗೂ ಜನಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ವಿದ್ಯೆಯಿಂದ ವಂಚಿತರಾಗುತ್ತಿದ್ದು, ಬಾಲ ಕಾರ್ಮಿಕ ಪದ್ಧತಿ ಇಂದಿಗೂ ಜೀವಂತವಾಗಿರುವುದು ವಿಷಾದನೀಯ. ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡಿಸುವುದು ಪೋಷಕರ ಕರ್ತವ್ಯವಾಗಿದೆ ಎಂದರು.
ಅನಾಥ ಮಕ್ಕಳನ್ನು ಹಣದ ಆಮಿಷಕ್ಕೆ ಬಾಲ ಕಾರ್ಮಿಕರನ್ನಾಗಿ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಬಡತನ ಹೆಚ್ಚಿರುವುದರಿಂದ ಮಕ್ಕಳನ್ನು ದುಡಿಮೆಗೆ ಕಳುಹಿಸುತ್ತಿದ್ದಾರೆ. ಇದು ಅಪರಾಧವಾಗಿದೆ. ಯಾವುದೇ ಆಮಿಷಕ್ಕೆ ಒಳಗಾಗದೆ ಶಿಕ್ಷಣ ಕೊಡಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಎಚ್.ಎನ್.ನಾಗೇಂದ್ರರಾಜ್ ಮಾತನಾಡಿ, ಬಾಲ ಕಾರ್ಮಿಕ ಪದ್ಧತಿ ಹಾಗೂ ಅದರ ಕಾನೂನುಗಳ ಬಗ್ಗೆ ತಿಳಿಸಿದರು.
ವಕೀಲ ಕೆಂಪೇಗೌಡ, ಮಕ್ಕಳ ಹಕ್ಕುಗಳ ಕುರಿತು ಹಾಗೂ ಗ್ರಾಮಾಂತರ ಠಾಣೆ ಎಸ್ಐ ಬಿ.ಚಿದಾನಂದ ಅವರು, ಮಾನವ ಕಳ್ಳಸಾಗಾಣೆ ನಿಯಂತ್ರಣ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಮೈಲಾರ ಪಟ್ಟಣ ಶಾಲೆಯ ಮುಖ್ಯಶಿಕ್ಷಕ ಮಂಜುನಾಥ್, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಕುರಿತು ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ವೇದಿಕೆಯಲ್ಲಿ ಸಿವಿಲ್ ನ್ಯಾಯಾಧೀಶ ಜಿ.ತಿಮ್ಮಯ್ಯ, ಪ್ರಾಂಶುಪಾಲ ರಾಜಯ್ಯ,ತಾಲ್ಲೂಕು ಕಾರ್ಮಿಕ ನಿರೀಕ್ಷಕ ಮಹೇಶ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಚ್.ಕೆ.ರಾಜನ್, ವಕೀಲರ ಸಂಘದ ಅಧ್ಯಕ್ಷ ಕೆ.ಬಿ.ಶುಭಮೂರ್ತಿ, ಸಹಾಯಕ ಸರ್ಕಾರಿ ಅಭಿಯೋಜಕ ಕೆ.ಪಿ.ಜ್ಞಾನೇಂದ್ರ, ಶಿಕ್ಷಣ ಇಲಾಖೆ ಸಮನ್ವಯಾಧಿಕಾರಿ ಡಿ. ಕುಮಾರ್, ಬಿಸಿಯೂಟದ ಸಹಾಯಕ ನಿರ್ದೇಶಕ ಲಕ್ಷ್ಮಣ್ ಬಳೂಟಗಿ, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಶಿವಣ್ಣಗೌಡ ಸೇರಿದಂತೆ ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.