ADVERTISEMENT

‘ಕಾಂಗ್ರೆಸ್‌ ನಾಶ ಅಸಾಧ್ಯ’

​ಪ್ರಜಾವಾಣಿ ವಾರ್ತೆ
Published 7 ಮೇ 2018, 12:59 IST
Last Updated 7 ಮೇ 2018, 12:59 IST

ಮಂಡ್ಯ: ‘ಭಾರತ ಸಂವಿಧಾನದ ಬದಲಾವಣೆ ಹಾಗೂ ಕಾಂಗ್ರೆಸ್‌ ಪಕ್ಷದ ನಾಶ ಯಾರಿಂದಲೂ ಸಾಧ್ಯವಿಲ್ಲ’ ಎಂದು ಲೋಕಸಭೆಯ ಕಾಂಗ್ರೆಸ್‌ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

‘ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ತತ್ವಗಳ ವಿರುದ್ಧ ಸಂಘಟಿತರಾಗಿ ಹೋರಾಟ ಮಾಡಬೇಕಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಕಾಂಗ್ರೆಸ್‌ ಮುಕ್ತಗೊಳಿಸುವುದಾಗಿ ಹೇಳುತ್ತಾರೆ. ಈ ಕಥೆಯನ್ನು ಕರ್ನಾಟಕದಲ್ಲಿ ಯಾರೂ ಕೇಳುವುದಿಲ್ಲ, ಅವರು ಗುಜರಾತಿನಲ್ಲಿ ಕಥೆ ಹೇಳಿಕೊಳ್ಳಲಿ. ಕಾಂಗ್ರೆಸ್‌ ಪಕ್ಷದ ಇತಿಹಾಸ ಜನರಿಗೆ ತಿಳಿದಿದೆ’ ಎಂದರು.

ಮಹದಾಯಿ ರಾಜಕಾರಣ: ಮಳವಳ್ಳಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪಿ.ಎಂ.ನರೇಂದ್ರಸ್ವಾಮಿ ಪರ ಮತಯಾ ಚನೆ ಮಾಡಿದ ಅವರು ‘ಮಹದಾಯಿ ವಿಚಾರದಲ್ಲಿ ಮೌನ ವಹಿಸಿದ್ದ ಪ್ರಧಾನಿ ಈಗ ಚುನಾವಣೆ ಸಮಯದಲ್ಲಿ ನೀರಿನ ರಾಜಕಾರಣ ಮಾಡುತ್ತಿದ್ದಾರೆ. ಕುಡಿಯುವ ನೀರಿನ ವಿಚಾರದಲ್ಲಿ ಕಾಂಗ್ರೆಸ್‌ ಪಕ್ಷ ಎಂದೂ ರಾಜಕೀಯ ಮಾಡಿಲ್ಲ. ಕೃಷ್ಣಾ ನದಿ ನೀರಿನ ಹಂಚಿಕೆ ವಿಚಾರ ಬಂದಾಗ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಕರ್ನಾಟಕ, ಆಂಧ್ರಪ್ರದೇಶ, ಕೇರಳ ಮುಖ್ಯಮಂತ್ರಿಗಳ ಸಭೆ ನಡೆಸಿ ನೀರನ್ನು ಸಮಾನವಾಗಿ ಹಂಚಿಕೆ ಮಾಡಿದ್ದರು. ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಿದ್ದರು. ಆದರೆ, ಮೋದಿ ಜನರೆದುರು ನಾಟಕವಾಡುತ್ತಿದ್ದಾರೆ’ ಎಂದು ಆರೋಪಿಸಿದರು.

ADVERTISEMENT

ತಪಾಸಣೆ: ಖರ್ಗೆ ಮಳವಳ್ಳಿಗೆ ಬಂದ ಸಂದರ್ಭದಲ್ಲಿ ಚುನಾವಣಾಧಿಕಾರಿಗಳು ಫ್ಲೈಯಿಂಗ್‌ ಸ್ಕ್ವಾಡ್‌ ನೇತೃತ್ವದಲ್ಲಿ ಅವರ ಹೆಲಿಕಾಪ್ಟರ್‌ ತಪಾಸಣೆ ನಡೆಸಿ ಸಿಬ್ಬಂದಿಯನ್ನು ವಿಚಾರಿಸಿದರು,

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.