ADVERTISEMENT

ಕಾಂಗ್ರೆಸ್ ಬೂತ್ ಮಟ್ಟದ ಚುನಾವಣೆಗೆ ಇಂದು ಚಾಲನೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2011, 9:10 IST
Last Updated 16 ಸೆಪ್ಟೆಂಬರ್ 2011, 9:10 IST

ಮಂಡ್ಯ: ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ಪಕ್ಷದ ಸಾಂಸ್ಥಿಕ ಚುನಾವಣೆಗೆ ಶುಕ್ರವಾರ ಚಾಲನೆ ಸಿಗಲಿದ್ದು, ಮೊದಲ ಹಂತದಲ್ಲಿ ಮದ್ದೂರು ಮತ್ತು ಮಳವಳ್ಳಿ ತಾಲ್ಲೂಕಿನ ಬೂತ್ ಹಂತದ ಸಮಿತಿಗಳಿಗೆ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆಯಲಿದೆ.

ಈ ಚುನಾವಣೆಗಳಲ್ಲಿ ಜಯಗಳಿಸಿದವರು ಜಿಲ್ಲಾ ಅಥವಾ ರಾಜ್ಯ ಮಟ್ಟದ ಯುವ ಕಾಂಗ್ರೆಸ್ ಘಟಕಗಳ ಪದಾಧಿಕಾರಿಗಳ ಸ್ಥಾನಗಳಿಗೆ ಸ್ಪರ್ಧಿಸುವ ಅರ್ಹತೆಯನ್ನು ಪಡೆಯಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಅಂದಾಜು 1950 ಬೂತ್‌ಗಳು ಇವೆ. ತಲಾ ಬೂತ್‌ಗೆ ಐವರನ್ನು ಆಯ್ಕೆ ಮಾಡಲು ಈಗ ಚುನಾವಣೆ ನಡೆಯುತ್ತಿದೆ.

ಶುಕ್ರವಾರ ಮದ್ದೂರು ತಾಲ್ಲೂಕಿನ 25 ಮತ್ತು ಮಳವಳ್ಳಿ ತಾಲ್ಲೂಕಿನ 37 ಬೂತ್‌ಗಳಿಗೆ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆಯಲಿದ್ದು, ಕ್ರಮವಾಗಿ 350 ಮತ್ತು 450 ಮಂದಿ ಸ್ಪರ್ಧೆಯಲ್ಲಿದ್ದಾರೆ. ಮಂಡ್ಯ ತಾಲ್ಲೂಕಿನಲ್ಲಿ ಎರಡು ಹಂತದ ಚುನಾವಣೆ ನಡೆಯಲಿದೆ.

ಉಳಿದಂತೆ 18 ರಂದು  ಮಂಡ್ಯ, ಮೇಲುಕೋಟೆ; 19ರಂದು ಮಂಡ್ಯ ಮತ್ತು ಶ್ರೀರಂಗಪಟ್ಟಣ, 20ರಂದು ನಾಗಮಂಗಲ ಮತ್ತುಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಚುನಾವಣೆ ನಡೆಯಲಿದೆ ಎಂದು ಜಿಲ್ಲೆಯಲ್ಲಿ ಚುನಾವಣಾ ಉಸ್ತುವಾರಿ ಹೊತ್ತಿರುವ ಸಾಜಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.