ADVERTISEMENT

ಕಾಡಾನೆ ಹಾವಳಿ: ಶಾಶ್ವತ ಪರಿಹಾರಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2011, 6:50 IST
Last Updated 21 ಸೆಪ್ಟೆಂಬರ್ 2011, 6:50 IST

ಮಂಡ್ಯ: ಮಳವಳ್ಳಿ ತಾಲ್ಲೂಕಿನ ಆಲದಹಳ್ಳಿ, ಧನಗೂರು, ಕನ್ನಲಿ ಸೇರಿದಂತೆ ಕೆಲ ಗ್ರಾಮಗಳಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿರುವ ಕಾಡಾನೆ ಹಾವಳಿ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ನೀಡಬೇಕು ಎಂದು ಆಗ್ರಹಪಡಿಸಿ ಕನ್ನಡಸೇನೆ ಕರ್ನಾಟಕದ ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟಿಸಿದರು.

ತಾಲ್ಲೂಕಿನ ಕಾಡು ಅಂಚಿನ ಅನೇಕ ಗ್ರಾಮಗಳಲ್ಲಿ ಈಚಿನ ದಿನಗಳಲ್ಲಿ ಕಾಡಾನೆ ಹಾವಳಿಯು ವ್ಯಾಪಕವಾಗಿದೆ. ರೈತರು ಬೆಳೆದ ಫಸಲು ಹಾನಿಯಾಗಿದೆ. ಇಷ್ಟೆಲ್ಲಾ ಆದರೂ ಜಿಲ್ಲಾಡಳಿತ ಇದನ್ನು ತಡೆಯಲು ಕ್ರಮವನ್ನೇ ತೆಗೆದುಕೊಂಡಿಲ್ಲ ಎಂದು ಕಾರ್ಯಕರ್ತರು ಆರೋಪಿಸಿದರು.

ಸಿಲ್ವರ್‌ಜ್ಯೂಬಿಲಿ ಪಾರ್ಕ್‌ನಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೂ ಮೆರವಣಿಗೆಯಲ್ಲಿ ಬಂದು ಪ್ರತಿಭಟನೆ ನಡೆಸಿದ ಕಾರ್ಯಕರ್ತರು,  ಬಳಿಕ ಈ ಸಂಬಂಧ ಮನವಿ ಅರ್ಪಿಸಿದರು.

ಅರಣ್ಯ ಇಲಾಖೆಯ ಸಿಬ್ಬಂದಿ ಆನೆ ಹಾವಳಿಯನ್ನು ತಡೆಯಲು ವಿಫಲರಾಗಿದ್ದು, ಗ್ರಾಮಸ್ಥರಿಗೆ ಊರನ್ನೇ ಖಾಲಿ ಮಾಡಿ ಎಂದು ಸಲಹೆ ಮಾಡುತ್ತಿದ್ದಾರೆ ಎಂದು ದೂರಿದರು.

ಕಾಡಾನೆ ಹಾವಳಿ ತಡೆಯಲು ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಬೇಕು, ನಷ್ಟವಾದ ಬೆಳೆಗಳಿಗೆ ಪರಿಹಾರ ಕೊಡಬೇಕು, ಕೃಷಿ ಭೂಮಿ ಹೊರತುಪಡಿಸಿ  ಅರಣ್ಯದ ಗಡಿ ಗುರುತಿಸಬೇಕು ಎಂದು ಒತ್ತಾಯಿಸಿದರು.
ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಸಿ.ಮಂಜುನಾಥ್, ಹೇಮಾವತಿ, ಹನುಮೇಶ್, ಸುಜಿತ್‌ಕುಮಾರ್, ವಿನೋದ್, ಜಯಮ್ಮ, ಗೌರಮ್ಮ, ಪಾರ್ವತಮ್ಮ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.