ADVERTISEMENT

ಕುಡಿಯುವ ನೀರಿನ ಸಮಸ್ಯೆಗೆ ಅಗತ್ಯ ಕ್ರಮ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2012, 7:50 IST
Last Updated 6 ಫೆಬ್ರುವರಿ 2012, 7:50 IST

ಮದ್ದೂರು: ಬೇಸಿಗೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಎಲ್ಲ ಜಿಲ್ಲಾ ಪಂಚಾಯಿತಿಗಳ ವ್ಯಾಪ್ತಿಯ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕಿ ಕಲ್ಪನಾ ಸಿದ್ದರಾಜು ತಿಳಿಸಿದರು.

ಸಮೀಪದ ಕೆಸ್ತೂರು ಗ್ರಾಮದಲ್ಲಿ ಕಿರು ನೀರು ಸರಬರಾಜು ಘಟಕ ನಿರ್ಮಾಣ ಕಾಮಗಾರಿಗೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು. ಕುಡಿಯುವ ನೀರು ಪೂರೈಕೆಗೆ ಪ್ರತ್ಯೇಕ  ಟ್ರಾನ್ಸ್‌ಫಾರ‌್ಮರ್ ಅಳವಡಿಸಲು ಸೆಸ್ಕ್ ಅಧಿಕಾರಿಗಳಿಗೆ ತಿಳಿಸಲಾಗಿದ್ದು, ಬಹುತೇಕ ಗ್ರಾಮಗಳಿಗೆ ಪ್ರತ್ಯೇಕ ಟ್ರಾನ್ಸ್‌ಫಾರ‌್ಮರ್ ಅಳವಡಿಸಲು ಅಧಿಕಾರಿಗಳು ಒಪ್ಪಿದ್ದಾರೆ ಎಂದರು. 

ಜಿಪಂ ಸದಸ್ಯ ಕೆ.ರವಿ ಮಾತನಾಡಿ, ತಮ್ಮ ಜಿಪಂ ಅನುದಾನದಲ್ಲಿ ಕೆಸ್ತೂರು ವ್ಯಾಪ್ತಿಯ ಬಹುತೇಕ ಗ್ರಾಮಗಳ ರಸ್ತೆ, ಚರಂಡಿ ಹಾಗೂ ಕುಡಿಯುವ ನೀರು ಪೂರೈಕೆ ಕಾಮಗಾರಿಗಳಿಗೆ ಮೊದಲ ಆದ್ಯತೆ ನೀಡಿದ್ದೇನೆ. ಬಾಕಿ ಉಳಿದ ಎಲ್ಲ ಕಾಮಗಾರಿಗಳನ್ನು ಮುಂದಿನ ಸಾಲಿನ ಅನುದಾನದಲ್ಲಿ ಪೂರ್ಣಗೊಳಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಸದಸ್ಯ ಬಿ.ರಾಮಕೃಷ್ಣ, ತಾಪಂ ಸದಸ್ಯರಾದ ಬಿಳಿಗೌಡ, ನಾರಾಯಣಸ್ವಾಮಿ, ಗ್ರಾಪಂ ಉಪಾಧ್ಯಕ್ಷ ಆನಂದ್, ಸದಸ್ಯ ಜಗದೀಶ್ ಸೇರಿದಂತೆ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.