ADVERTISEMENT

ಕೃಷಿ ಭೂಮಿಗೆ ದೊರೆಯದ ನೀರು: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2012, 8:00 IST
Last Updated 17 ಏಪ್ರಿಲ್ 2012, 8:00 IST

ಮಂಡ್ಯ: ಮದ್ದೂರು ತಾಲ್ಲೂಕಿನ ಕೊನೆಯ ಭಾಗದ ಗ್ರಾಮಗಳ ವ್ಯಾಪ್ತಿಯ ಕೃಷಿ ಭೂಮಿಗೂ ನೀರು ಲಭ್ಯವಾಗುವಂತೆ ವಿ.ಸಿ.ನಾಲೆಗೆ ನೀರುಹರಿಸಬೇಕು ಎಂದು ಆಗ್ರಹಪಡಿಸಿ ಆ ಭಾಗದ ರೈತರು ಸೋಮವಾರ ನಗರದಲ್ಲಿ ಕಾವೇರಿ ನೀರಾವರಿ ನಿಗಮದ ಕಚೇರಿ ಎದುರು ಪ್ರತಿಭಟನೆಯನ್ನು ನಡೆಸಿದರು.

ಜಿಲ್ಲಾ ರೈತ ಸಂಘದ ಅಧ್ಯಕ್ಷ ಕೋಣಸಾಲೆ ನರಸರಾಜು ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮದ್ದೂರು ತಾಲ್ಲೂಕಿನ ಪಣ್ಣೆದೊಡ್ಡಿ, ಆನೆದೊಡ್ಡಿ, ಈರೇಗೌಡನದೊಡ್ಡಿ, ಹೊಸಕೆರೆ ಗ್ರಾಮಗಳ ರೈತರು ಪಾಲ್ಗೊಂಡಿದ್ದರು.

ನೀರು ನಿರ್ವಹಣೆ ವೈಪಲ್ಯವನ್ನು ಖಂಡಿಸಿ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದ ರೈತರು, ಕೊನೆಯ ಭಾಗದವರೆಗೂ ನೀರು ತಲುಪುವಂತೆ ಅಧಿಕಾರಿಗಳು ನಿರ್ವಹಣೆ ಮಾಡುತ್ತಿಲ್ಲ ಎಂದು ಟೀಕಿಸಿದರು.

ನೀರು ಕೊರತೆಯಿಂದ ಬೆಳೆ ನಷ್ಟವಾದರೆ ಅದಕ್ಕೆ ಅಧಿಕಾರಿಗಳೇ ಹೊಣೆ ಆಗಬೇಕಾಗುತ್ತದೆ ಇನ್ನಾದರೂ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಈ ಮೂಲಕ ಒಣಗುತ್ತಿರುವ ಬೆಳೆಯನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ವಿಜಯಕುಮಾರ್, ಶಂಕರ್, ರಾಮಣ್ಣ ಮತ್ತಿತರಿದ್ದರು.

ಬಸವೇಶ್ವರ ಪ್ರತಿವೆು ಸ್ಥಾಪನೆಗೆ ಮನವಿ

ಮಂಡ್ಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರಿನ ಕಾವೇರಿ ಉದ್ಯಾನದಲ್ಲಿ ಬಸವೇಶ್ವರರ ಪ್ರತಿಮೆ ಸ್ಥಾಪಿಸಲು ಕ್ರಮಕೈಗೊಳ್ಳಬೇಕು ಎಂದು ಅನುಭವ ಮಂಟಪ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷ ಎಸ್.ಮಲ್ಲಾರಾಧ್ಯ ಪ್ರಸನ್ನ ಅವರು ಮನವಿ ಮಾಡಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಅವರು, ಪ್ರತಿಮೆ ಸ್ಥಾಪನೆ ಮಾಡಬೇಕು ಎಂದು ಈ ಹಿಂದೆ ಚಲುವರಾಯಸ್ವಾಮಿ ಅವರು ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ಸಂದರ್ಭದಲ್ಲಿಯೇ ತೀರ್ಮಾನ ಕೈಗೊಳ್ಳಲಾಗಿದೆ. ಆದರೆ, ಇದುವರೆಗೂ ಅದು ಕಾರ್ಯಗತಗೊಂಡಿಲ್ಲ ಎಂದು ವಿಷಾದಿಸಿದ್ದಾರೆ.

ಇದು, ಬಸವ ಜಯಂತಿಯ ಶತಮಾನೋತ್ಸವ ವರ್ಷವೂ ಆಗಿದೆ. ಈ ಕಾರಣದಿಂದಾಗಿ ಜಿಲ್ಲಾಡಳಿತ ಈ ನಿಟ್ಟಿನಲ್ಲಿ ಚಿಂತನೆ ನಡೆಸಿ ಬಸವೇಶ್ವರರ ಪ್ರತಿಮೆ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.