ಮಂಡ್ಯ: ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಿದೆ, ಖಾಸಗಿ ಶಾಲಾ-ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ಸ್ಥಾಪನೆ ಅನುಮತಿ ನೀಡುವ ಮೂಲಕ ಖಾಸಗೀಕರಣಕ್ಕೆ ಸರ್ಕಾರ ಒತ್ತು ನೀಡುತ್ತಿದೆ ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ ರಾಜ್ಯ ಘಟಕ ಅಧ್ಯಕ್ಷ ಎಚ್.ಆರ್. ನವೀನ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.
ನಗರದ ರೋಟರಿ ಸಭಾಂಗಣದಲ್ಲಿ ಗುರುವಾರ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ)ನ ಜಿಲ್ಲಾ ಮಟ್ಟದ ಏಳನೇ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಅಜೀಂ ಪ್ರೇಮ್ಜಿ, ಅಲೆಯನ್ಸ್ ವಿವಿ ಸ್ಥಾಪನೆಗೆ ಅನುಮತಿ ನೀಡಿರುವುದು ಹಾಗೂ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ಕಾರ್ಯಕ್ರಮದ ನಿರ್ವಹಣೆಯನ್ನು ಖಾಸಗಿ ಸಂಸ್ಥೆ/ವ್ಯಕ್ತಿಗಳಿಗೆ ವಹಿಸುತ್ತಿರುವುದನ್ನು ಉಲ್ಲೇಖಿಸಿ ಹೇಳಿದರು.
ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರನ್ನು ನೇಮಿಸಿಲ್ಲ. ಸಕಾಲದಲ್ಲಿ ವಿದ್ಯಾರ್ಥಿ ವೇತನ ನೀಡುತ್ತಿಲ್ಲ. ವಸತಿ ನಿಲಯಗಳಲ್ಲಿ ಸೂಕ್ತ ಸೌಲಭ್ಯವಿಲ್ಲ. ಕಾಲೇಜುಗಳಲ್ಲಿ ಲೈಂಗಿಕ ದೌರ್ಜನ್ಯ ತಡೆ ಸಮಿತಿ ರಚಿಸಿಲ್ಲ. ಹೀಗೆ, ಅನೇಕ ಸಮಸ್ಯೆಗಳಿರುವ ಸರ್ಕಾರಿ ಶಾಲಾ ಕಾಲೇಜುಗಳನ್ನು ಸುಧಾರಿಸದೆ, ಎಲ್ಲದಕ್ಕೂ ಖಾಸಗಿ ಶಿಕ್ಷಣ ಸಂಸ್ಥೆಗಳತ್ತ ಮುಖ ಮಾಡುತ್ತಿರುವುದು ಏಕೆ ಎಂದು ಪ್ರಶ್ನಿಸಿದರು.
ವಿಚಾರವಾದಿ ಪ್ರೊ. ಎಚ್.ಎಲ್. ಕೇಶವ ಮೂರ್ತಿ, ಕರ್ನಾಟಕ ಪ್ರಾಂತ ರೈತ ಸಂಘದ ಟಿ.ಎಲ್.ಕೃಷ್ಣೇಗೌಡ, ಜೆಡಿಎಸ್ ಯುವ ಮುಖಂಡ ಅಶೋಕ್ ಎಸ್.ಡಿ.ಜಯರಾಂ, ಎಸ್ಎಫ್ಐ ಜಿಲ್ಲಾ ಘಟಕದ ಅಧ್ಯಕ್ಷ ಎನ್.ರಾಜೇಂದ್ರ ಸಿಂಗ್ ಬಾಬು, ವಿನಯ್ ಕುಮಾರ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.