ADVERTISEMENT

ಗ್ರಾಮೀಣ ವೃದ್ಧರಿಗೆ ಸೌಲಭ್ಯ ಒದಗಿಸಿ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2012, 4:40 IST
Last Updated 2 ಅಕ್ಟೋಬರ್ 2012, 4:40 IST

ಮಳವಳ್ಳಿ: ಹಿರಿಯ ನಾಗರಿಕರಿಗೆ ವೃದ್ಧಾಪ್ಯ ವೇತನ ವಿತರಿಸುವಲ್ಲಿ ಆಗುತ್ತಿರುವ ವಿಳಂಬವನ್ನು ತಪ್ಪಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಆರ್.ಎನ್.ವಿಶ್ವಾಸ್ ಒತ್ತಾಯಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆದ ಹಿರಿಯ ನಾಗರಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ನಗರ ಪ್ರದೇಶದಲ್ಲಿ ಹಿರಿಯ ನಾಗರಿಕರು ಸವಲತ್ತು ಪಡೆಯುತ್ತಿದ್ದಾರೆ. ಆದರೆ ಗ್ರಾಮೀಣ ಪ್ರದೇಶದ ವೃದ್ಧರಿಗೆ ವೇತನ, ಸಂಧ್ಯಾಸುರಕ್ಷಾ ಯೋಜನೆಯಡಿ ನೀಡುತ್ತಿರುವ ಧನ ಸಹಾಯ ಅವರ ಕೈ ಸೇರುತ್ತಿಲ್ಲ. ಅದಕ್ಕಾಗಿ ಫಲಾನುಭವಿಗಳು ಅಲೆದಾಡುತ್ತಿದ್ದಾರೆ ಎಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ಜೆ.ವಿ.ಕುಲಕರ್ಣಿ ಮಾತನಾಡಿ ದೇಶದಲ್ಲಿ ಶೇ 56 ರಷ್ಟು ವೃದ್ಧರು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಇದರ ಬಗ್ಗೆ ತನಿಖೆ ನಡೆಸಿ ರಾಷ್ಟ್ರಪತಿಗೆ ವರದಿ ನೀಡಲಾಗುತ್ತಿದೆ. ಮಧ್ಯಪ್ರದೇಶದಲ್ಲಿ ಹೆಚ್ಚು ದೌರ್ಜನ್ಯ ನಡೆಯುತ್ತಿದ್ದು, ಕರ್ನಾಟಕದಲ್ಲಿ ತೀರ ಕಡಮೆ ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಬಿ.ಪಿ.ರಾಧ, ಸ್ಥಾಯಿ ಸಮಿತಿ ಅಧ್ಯಕ್ಷ ಚಿಕ್ಕಲಿಂಗಯ್ಯ, ಕಾರ್ಯನಿರ್ವಾಣಾಧಿಕಾರಿ ಏಜಾಸ್‌ಪಾಷ, ಸರ್ಕಾರಿ ಸಹಾಯಕ ಅಭಿಯೋಜಕ ಎಚ್.ವಿ.ಕೃಷ್ಣಮೂರ್ತಿ, ವಕೀಲರ ಸಂಘದ ಅಧ್ಯಕ್ಷ ಪಿ.ಈರಪ್ಪ, ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿ ಚೈತ್ರ, ವಕೀಲ ಮಹೇಶ್ ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.