ಕೆ.ಆರ್.ಪೇಟೆ: ‘ಜೆಡಿಎಸ್ ಅಭ್ಯರ್ಥಿಗೆ ಟಿಕೆಟ್ ಹಂಚಿಕೆ ವಿಚಾರದಲ್ಲಿ ಗೊಂದಲ ಉಂಟಾಯಿತು. ಅದಕ್ಕೆ ಕ್ಷೇತ್ರದ ಜನರಲ್ಲಿ ಕ್ಷಮೆ ಕೋರುತ್ತೇನೆ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಪಟ್ಟಣದ ಶ್ರೀರಂಗ ಚಿತ್ರಮಂದಿರದ ಆವರಣದಲ್ಲಿ ಮಂಗಳವಾರ ನಡೆದ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
‘ಪಕ್ಷ ಯಾರನ್ನೂ ಕಡೆಗಣಿಸುವುದಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಜೆಡಿಎಸ್ ಪಕ್ಷಕ್ಕೆ ಒಂದೊಂದು ಮತ ಮುಖ್ಯವಾಗಿರುವ ಕಾರಣ ಎಲ್ಲಾ ಕೋನಗಳಲ್ಲಿ ವಿಚಾರ ಮಾಡಿ ನಾರಾಯಣಗೌಡರಿಗೆ ಟಿಕೆಟ್ ನೀಡಲಾಗಿದೆ. ಪಕ್ಷದ ಹಿರಿಯರು ಇದನ್ನು ಗಮನಿಸಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡುವರೆಂಬ ನಂಬಿಕೆ ಇದೆ’ ಎಂದರು.
‘ಕೆ.ಆರ್.ಪೇಟೆ ಕ್ಷೇತ್ರ ಜೆಡಿಎಸ್ ಭದ್ರಕೋಟೆ. ಕಷ್ಟಕಾಲದಲ್ಲಿ ದೇವೇಗೌಡರ ಕುಟುಂಬವನ್ನು ಕೈಹಿಡಿದ ತಾಲ್ಲೂಕಾಗಿದೆ. ಯಾವುದೇ ಗೊಂದಲ, ಅಪಪಪ್ರಚಾರಕ್ಕೆ ಒಳಗಾಗದೆ ಜೆಡಿಎಸ್ ಅಭ್ಯರ್ಥಿ ಪರ ಕೆಲಸ ಮಾಡಬೇಕು. ಪಕ್ಷ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ಎಲ್ಲಾ ಅವಕಾಶಗಳಿವೆ. ಪಕ್ಷ ಅಧಿಕಾರಕ್ಕೆ ಬಂದರೆ ಕೆ.ಆರ್.ಪೇಟೆಯ ಸಮಗ್ರ ಅಭಿವೃದ್ಧಿಗೆ ಬದ್ಧನಾಗಿದ್ದೇನೆ. ನನ್ನ ಕ್ಷೇತ್ರವೆಂದೇ ಭಾವಿಸಿ ಬೆಂಬಲ ನೀಡಬೇಕು. ಜೆ ಡಿಎಸ್ ಎಲ್ಲಿದೆ ಎಂದು ಉಡಾಫೆ ಮಾತುಗಳನ್ನಾಡುತ್ತಿರುವ ಸಿ.ಎಂ ಸಿದ್ದರಾಮಯ್ಯ ಅವರಿಗೆ ಉತ್ತರ ನೀಡಬೇಕು’ ಎಂದರು.
ಶಾಸಕ ನಾರಾಯಣಗೌಡ, ಸಂಸದ ಸಿಎಸ್.ಪುಟ್ಟರಾಜು, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಡಿ.ರಮೇಶ್, ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟಸುಬ್ಬೇಗೌಡ, ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಟಿ.ಮಂಜು, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಜಾನಕೀರಾಮು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.