ADVERTISEMENT

ಬೆಲೆ ಏರಿಕೆ ವಿರೋಧಿಸಿ ಜೈಲ್ ಭರೋ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2012, 6:43 IST
Last Updated 20 ಡಿಸೆಂಬರ್ 2012, 6:43 IST

ಮಂಡ್ಯ: ಬೆಲೆ ಏರಿಕೆ ನಿಯಂತ್ರಣ, ಕನಿಷ್ಠ ವೇತನ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಜಿಲ್ಲಾ ಸಮಿತಿಯ ಕಾರ್ಯಕರ್ತರು ಬುಧವಾರ ಜೈಲ್ ಭರೋ ಚಳವಳಿ ನಡೆಸಿದರು.

ಕೈಗಾರಿಕೆಗಳಲ್ಲಿನ ಕಾಯಂ ನೌಕರರಿಗೆ ನೀಡುವ ವೇತನ ಮತ್ತು ಇತರೆ ಸೌಲಭ್ಯಗಳನ್ನು ಗುತ್ತಿಗೆ ನೌಕರರಿಗೂ ನೀಡಬೇಕು. ಬೋನಸ್ ಭವಿಷ್ಯನಿಧಿ ಪಾವತಿಗೆ ಇರುವ ಎಲ್ಲ ಮಿತಿಗಳನ್ನು ತೆಗೆದುಹಾಕಬೇಕು. ಎಲ್ಲರಿಗೂ ನಿವೃತ್ತಿ ವೇತನ ನೀಡಬೇಕು ಎಂಬ ಬೇಡಿಕೆ ಇಟ್ಟುಕೊಂಡು ಈ ಚಳವಳಿಯನ್ನು ಹಮ್ಮಿಕೊಂಡಿದ್ದರು.

ಕಾರ್ಮಿಕ ಸಂಘಟನೆಗಳೊಂದಿಗೆ ನಡೆಸಿದ ಮಾತುಕತೆಗಳಲ್ಲಿ ಹಲವಾರು ವಿಷಯಗಳಿಗೆ ಸರ್ಕಾರ ಒಪ್ಪಿಗೆ ನೀಡಿದೆ. ಆದರೆ, ಅದನ್ನು ಜಾರಿಗೊಳಿಸುವಲ್ಲಿ ಹಿಂದೇಟು ಹಾಕುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.
ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ಉದ್ಯೋಗ ಸೃಷ್ಟಿ ಹಾಗೂ ರಕ್ಷಣೆಗೆ ಮುಂದಾಗಬೇಕು.

ಕಾರ್ಮಿಕ ಕಾನೂನುಗಳನ್ನು ಜಾರಿಗೊಳಿಸಲು ಕಠಿಣ ಕ್ರಮಕೈಗೊಳ್ಳಬೇಕು. ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ರಾಷ್ಟ್ರೀಯ ಸಾಮಾಜಿಕ ಭದ್ರತೆ ನಿಧಿ ಸ್ಥಾಪಿಸಬೇಕು. ಸಾರ್ವಜನಿಕ ಉದ್ದಿಮೆಗಳಲ್ಲಿನ ಬಂಡವಾಳ ಹಿಂತೆಗೆತವನ್ನು ನಿಲ್ಲಿಸಬೇಕು ಎಂಬುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮನವಿಪತ್ರದಲ್ಲಿ ಉಲ್ಲೇಖಿಸಿದ್ದಾರೆ.ಸಿ.ಕುಮಾರಿ, ಮಹದೇವಮ್ಮ ಸೇರಿದಂತೆ ಹಲವರು ಪ್ರತಿಭಟನೆಯ ಮುಂಚೂಣಿಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.