ಕೃಷ್ಣರಾಜಪೇಟೆ: ದೇಶದಲ್ಲಿನ ಭ್ರಷ್ಟಾಚಾರ ವ್ಯವಸ್ಥೆಯು ಭಾರತದ ಅಭಿವೃದ್ಧಿಗೆ ಮಾರಕವಾಗಿದ್ದು, ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಚಿಂತನೆ ನಡೆಸಬೇಕು ಎಂದು ನಾಡಿನ ಖ್ಯಾತ ಆರ್ಥಿಕ ತಜ್ಞ ಡಾ.ಎಚ್.ಆರ್. ಕೃಷ್ಣಯ್ಯಗೌಡ ತಿಳಿಸಿದರು.
ಪಟ್ಟಣದ ಮಹಿಳಾ ಸರ್ಕಾರಿ ಪದವಿ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಬುಧವಾರ ಏರ್ಪಡಿಸಿದ್ದ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪ್ರಪಂಚದ ಶ್ರೇಷ್ಠ ಆರ್ಥಿಕ ತಜ್ಞರೆನಿಸಿರುವ ಡಾ.ಮನಮೋಹನ ಸಿಂಗ್ ನಮ್ಮ ದೇಶದ ಪ್ರಧಾನಿ ಗಳಾಗಿರುವುದು ಎಲ್ಲರ ಸೌಭಾಗ್ಯ. ಭಾರತ ದೇಶದ ಮುಂಗಡ ಪತ್ರದ ಮಂಡನೆಯನ್ನು ಇಡೀ ವಿಶ್ವವೇ ತುದಿಗಾಲಲ್ಲಿ ನಿಂತು ನಿರೀಕ್ಷಿಸುತ್ತದೆ. ಆದರೆ ನಮ್ಮಲ್ಲಿನ ಅತಿಯಾದ ಭ್ರಷ್ಟಾಚಾರದಿಂದ ದೇಶವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ ಎಂಬ ಹಣೆ ಪಟ್ಟಿಯನ್ನು ಕಳಚಿಕೊಳ್ಳಲು ಸಾಧ್ಯ ವಾಗ್ತುತಿಲ್ಲ ಎಂದು ಅವರು ವಿಷಾದಿಸಿದರು.
ತಹಶೀಲ್ದಾರ್ ಡಾ.ಎಚ್.ಎಲ್. ನಾಗರಾಜ್ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನ ಪ್ರಭಾರ ಪ್ರಾಚಾರ್ಯ ಟಿ.ಎಂ.ದೇವರಾಜ್ ಅಧ್ಯಕ್ಷತೆ ವಹಿಸಿದ್ದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಿ.ಎಂ.ಆಶಾ ಪ್ರಾಸ್ತಾವಿಕ ನುಡಿಗಳಾಡಿದರು. ಕಾಲೇಜಿನ ಅಧೀಕ್ಷಕ ಬಿ.ಎ.ಮಂಜುನಾಥ್, ಪುರಸಭೆ ಸದಸ್ಯ ಕೆ.ಆರ್.ನೀಲಕಂಠ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.