ಮಂಡ್ಯ: ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ರಾಜ್ಯ ಸರ್ಕಾರ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರನ್ನು ವರ್ಗಾವಣೆ ಮಾಡಿದೆ. ಅವರ ಜಾಗಕ್ಕೆ ಐಎಎಸ್ ಅಧಿಕಾರಿ ಪಿ.ಸಿ.ಜಾಫರ್ ಅವರನ್ನು ನೇಮಕ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಒತ್ತಡಕ್ಕೆ ಮಣಿದು ಮೈತ್ರಿ ಅಭ್ಯರ್ಥಿ ಕೆ.ನಿಖಿಲ್ ಪರ ಏಕಪಕ್ಷೀಯವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಹಲವು ದೂರು ದಾಖಲಾಗಿದ್ದವು. ನಿಖಿಲ್ ನಾಮಪತ್ರ ಪರಿಶೀಲನೆ ಸಂದರ್ಭದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಕಡೆ ಏಜೆಂಟರು ಆಕ್ಷೇಪಣೆ ಸಲ್ಲಿಸಿದ್ದರೂ ಅದನ್ನು ಪರಿಗಣಿಸದೇ ನಾಮಪತ್ರ ಅಂಗೀಕರಿಸಿದ್ದಾರೆ ಎಂದು ಆರೋಪಿಸಲಾಗಿತ್ತು.
ನೀತಿ–ನಿಯಮಗಳನ್ನು ಗಾಳಿಗೆ ತೂರಿ ನಿಖಿಲ್ ಗೆಲುವಿಗಾಗಿ ಜಿಲ್ಲಾ ಚುನಾವಣಾಧಿಕಾರಿ ಕೆಲಸ ಮಾಡುತ್ತಿದ್ದಾರೆ. ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯಲು ಅವರು ಸ್ಥಾನ ತೊರೆಯಬೇಕು ಎಂದು ಸುಮಲತಾ ಒತ್ತಾಯಿಸಿದ್ದರು. ಈ ಕುರಿತು ಚುನಾವಣಾ ಆಯೋಗಕ್ಕೆ ಸರಣಿ ದೂರುಗಳು ದಾಖಲಾಗಿದ್ದವು. ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಪರಿಶೀಲನೆ ನಡೆಸಿದ್ದರು.
ಸ್ಥಳೀಯರು ಎಂಬ ಕಾರಣಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಕೆ.ಯಾಲಕ್ಕಿಗೌಡ ಅವರನ್ನು ಸರ್ಕಾರ ಈಚೆಗೆ ವರ್ಗಾವಣೆ ಮಾಡಿತ್ತು. ಎನ್.ಮಂಜುಶ್ರೀ 2017ರಆ.9ರಿಂದ ಮಂಡ್ಯ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.