ADVERTISEMENT

ಮುಡಾ ಹಗರಣ: ಸಿಬಿಐ ತನಿಖೆಗೆ ಆದೇಶ

​ಪ್ರಜಾವಾಣಿ ವಾರ್ತೆ
Published 11 ಜನವರಿ 2014, 4:44 IST
Last Updated 11 ಜನವರಿ 2014, 4:44 IST

ಬೆಂಗಳೂರು: ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) 2009ರಲ್ಲಿ 108 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಮುಡಾ ನಿರ್ಮಿಸಿದ ಬಡಾವಣೆಗಳಲ್ಲಿ ಕಾನೂನುಬಾಹಿರವಾಗಿ ಪ್ರಭಾವಿ ವ್ಯಕ್ತಿಗಳಿಗೆ ನಿವೇಶನ ಹಂಚಿಕೆ ಮಾಡಿದ ಆರೋಪ ಕೇಳಿಬಂದಿತ್ತು. ಶಾಸಕರು, ಮುಡಾ ಅಧ್ಯಕ್ಷರು, ಆಯುಕ್ತರು ಮತ್ತು ಅಧಿಕಾರಿಗಳು ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪವಿದೆ. ನಿವೇಶನ ಹಾಗೂ ಕಟ್ಟಡಗಳನ್ನು ಹೊಂದಿರುವವರಿಗೆ ಮತ್ತೆ ನಿವೇಶನ ಮಂಜೂರು ಮಾಡಿರುವುದು ಹಾಗೂ ರಾಜಕೀಯ ಒತ್ತಡಕ್ಕೆ ಮಣಿದು ನಿವೇಶನ ಹಂಚಿಕೆ ಮಾಡುವ ಮೂಲಕ ಕಾನೂನು ಉ್ಲಲಂಘಿಸಲಾಗಿದೆ ಎಂಬ ಆಪಾದನೆ ಇದೆ.

ಈ ಪ್ರಕರಣದ ಕುರಿತು ಸ್ಥಳೀಯ ವಕೀಲ ಟಿ.ಎಸ್‌. ಸತ್ಯಾನಂದ ಅವರು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ನ್ಯಾಯಾಲಯದ ಆದೇಶದಂತೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದರು. ನಗರಾಭಿವೃದ್ಧಿ ಇಲಾಖೆಯ ಸೂಚನೆಯಂತೆ ಮುಡಾ ಆಯುಕ್ತರು ಮಂಡ್ಯ ಪಶ್ಚಿಮ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದರು.

2013ರ ಸೆಪ್ಟೆಂಬರ್‌ 1ರಂದು ಪ್ರಥಮ ಮಾಹಿತಿ ವರದಿ ದಾಖಲಿಸಲಾಗಿತ್ತು. ಸರ್ಕಾರದ ಆದೇಶದನ್ವಯ ಮಂಡ್ಯ ಪಶ್ಚಿಮ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಮೊಕದ್ದಮೆಯ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.